ಬೆಂಗಳೂರು: ಅಸಂಘಟಿತ ವಲಯಕ್ಕೆ ಪ್ಯಾಕೇಜ್ ಘೋಷಣೆ ಮಾಡಿದಂತೆ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೂ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸರ್ಕಾರ ಈ ಕೂಡಲೇ ₹ 1,300 ಕೋಟಿ ಆರ್.ಟಿ.ಇ. ಬಾಕಿ ಬಿಡುಗಡೆ ಮಾಡಬೇಕು. ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿರುವ ಶಿಕ್ಷಕರಿಗೆ ಉತ್ತೇಜನ ನೀಡಬೇಕು. ಲಾಕ್ಡೌನ್ ನಂತರ ಎರಡು ತಿಂಗಳಿನಿಂದ ಶಿಕ್ಷಣ ಸಂಸ್ಥೆಗಳು ಆರ್ಥಿಕ ಹೊರೆಯಿಂದಾಗಿ ಶಿಕ್ಷಕರಿಗೆ ಸಂಬಳ ನೀಡಲು ತೊಂದರೆಯಾಗಿದೆ. ಶಿಕ್ಷಣ ಇಲಾಖೆ ಆರ್ಟಿಇ ಬಾಕಿಯನ್ನು ಪಾವತಿಸದೆ ಇರುವುದರಿಂದಾಗಿ ಶಿಕ್ಷಕರ ವೇತನ ನೀಡಲು ಸಾಧ್ಯವಾಗಿಲ್ಲ ಎಂದಿದ್ದಾರೆ.
ಸರ್ಕಾರವು ಅಸಂಘಟಿತವಲಯಕ್ಕೆ ಪ್ಯಾಕೇಜ್ ಘೋಷಣೆ ಮಾಡಿದಂತೆ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೂ ಕೂಡ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿದರೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿರುವ ಅವರ ಸೇವೆಗೆ ಉತ್ತೇಜನ ನೀಡಿದಂತಾಗುತ್ತದೆ. ಹೀಗಾಗಿ ಕೂಡಲೇ ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಸಮಾಲೋಚನೆ ನಡೆಸಿ ಶಿಕ್ಷಕರ ಹಿತ ಕಾಯಬೇಕೆಂದು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.