ADVERTISEMENT

‘ಚಿಲುಮೆ’ ವಿರುದ್ಧದ ಪ್ರಕರಣ ಮತ್ತೊಬ್ಬ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 20:51 IST
Last Updated 28 ನವೆಂಬರ್ 2022, 20:51 IST
   

ಬೆಂಗಳೂರು: ಮತದಾರರ ವೈಯಕ್ತಿಕ ಮಾಹಿತಿ ಕಳವು ಹಾಗೂ ದುರ್ಬಳಕೆ ಆರೋಪದಡಿ ಚಿಲುಮೆ ಸಂಸ್ಥೆ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಅನಿಲ್‌ ಎಂಬುವವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 12ಕ್ಕೆ ಏರಿದೆ.

‘ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ಜೊತೆಗೆ ಒಡನಾಟ ಹೊಂದಿದ್ದ ಅನಿಲ್, ಮತದಾರರ ಮಾಹಿತಿ ಸಂಗ್ರಹಿಸುವ ಕೆಲಸಕ್ಕೆ ಸಹಾಯ ಮಾಡಿದ್ದ. ರವಿಕುಮಾರ್‌ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಅನಿಲ್ ಹೆಸರು ಬಾಯ್ಬಿಟ್ಟಿದ್ದ. ಈ ಮಾಹಿತಿ ಆಧರಿಸಿ ಅನಿಲ್‌ನನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಸಮೀಕ್ಷೆ ಮಾಡಲು ಮುಂದಾಗಿದ್ದ ಚಿಲುಮೆ ಸಂಸ್ಥೆ ಸಿಬ್ಬಂದಿ, ಅದೇ ಕ್ಷೇತ್ರ ವ್ಯಾಪ್ತಿಯಲ್ಲಿ ಕಚೇರಿ ತೆರೆದಿದ್ದರು. ಕಚೇರಿ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿದ್ದ ಅನಿಲ್, ಸಿಬ್ಬಂದಿ ನೇಮಕ ಹಾಗೂ ಸಾರಿಗೆ ಸೌಕರ್ಯ ಕಲ್ಪಿಸುವ ಕೆಲಸವನ್ನೂ ಮಾಡುತ್ತಿದ್ದ. ಪ್ರಕರಣ ದಾಖಲಾಗುತ್ತಿದ್ದಂತೆ ಈತ ಪರಾರಿಯಾಗಿದ್ದ’ ಎಂದು ತಿಳಿಸಿದರು.

ADVERTISEMENT

ಅಧಿಕಾರಿಗಳ ವಿಚಾರಣೆ ಮುಂದುವರಿಕೆ: ಪ್ರಕರಣದಲ್ಲಿ ಬಂಧಿಸಲಾಗಿರುವ ಬಿಬಿಎಂಪಿ ಕಂದಾಯ ಅಧಿಕಾರಿಗಳಾದ ಸುಹೇಲ್‌ ಅಹಮದ್‌, ಕೆ.ಚಂದ್ರಶೇಖರ್‌, ಮಹೇಶ್‌ ಹಾಗೂ ಉಪ ಕಂದಾಯ ಅಧಿಕಾರಿ ವಿ.ಬಿ. ಭೀಮಾಶಂಕರ್‌ ಅವರ ವಿಚಾರಣೆಯನ್ನು ‍ಪೊಲೀಸರು ಮುಂದುವರಿಸಿದ್ದಾರೆ.

‘ಮತದಾರರ ಸಮೀಕ್ಷೆಯೇ ಕಾನೂನುಬಾಹಿರ. ಇಂಥ ಸಮೀಕ್ಷೆ ಕೈಗೊಳ್ಳಲು ತೀರ್ಮಾನಿಸಿದ್ದ ಚಿಲುಮೆ ಸಂಸ್ಥೆಗೆ ಬಂಧಿತ ಅಧಿಕಾರಿಗಳು ಸಹಕಾರ ನೀಡಿದ್ದರು. ಮತಗಟ್ಟೆ ಅಧಿಕಾರಿ (ಬಿಎಲ್‌ಒ) ಗುರುತಿನ ಚೀಟಿಗಳನ್ನೂ ಅಕ್ರಮವಾಗಿ ಮಾಡಿಕೊಟ್ಟಿದ್ದರು. ಆರೋಪಿತ ಅಧಿಕಾರಿಗಳು, ಹಿರಿಯ ಅಧಿಕಾರಿಗಳ ಸೂಚನೆಯಂತೆ ಕೆಲಸ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಸೂಕ್ತ ಪುರಾವೆಗಾಗಿ ಹುಡುಕಾಟ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.