ಬೆಂಗಳೂರು: ಪ್ರತಿಪಕ್ಷಗಳು ಎಷ್ಟೇ ವಿರೋಧ ವ್ಯಕ್ತಪಡಿಸಿದರೂ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಿಯೇ ಸಿದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿರುವುದಾಗಿ ಬಿಜೆಪಿ ಟ್ವೀಟ್ ಮಾಡಿದೆ.
ಬೆಳಗಾವಿಯಲ್ಲಿ ಇತ್ತೀಚೆಗೆ ಮುಕ್ತಾಯವಾದವಿಧಾನಮಂಡಲ ಅಧಿವೇಶನದಲ್ಲಿ 'ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆ'ಗೆ ಅಂಗೀಕಾರ ಪಡೆಯಲು ರಾಜ್ಯ ಸರ್ಕಾರ ಉದ್ದೇಶಿಸಿತ್ತು. ಆದರೆ, ವಿಧಾನ ಪರಿಷತ್ನಲ್ಲಿ ಅಗತ್ಯ ಬೆಂಬಲ ಸಿಗದ ಕಾರಣ ಕೊನೇ ಕ್ಷಣದಲ್ಲಿ ನಿರ್ಧಾರದಿಂದ ಹಿಂದೆ ಸರಿದಿತ್ತು. ಇದರಿಂದ ಸರ್ಕಾರಕ್ಕೆ ಮುಖಭಂಗವಾದಂತಾಗಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬೊಮ್ಮಾಯಿ ಅವರು,'ಪ್ರತಿಪಕ್ಷಗಳು ಎಷ್ಟೇ ವಿರೋಧ ವ್ಯಕ್ತಪಡಿಸಿದರೂ ರಾಜ್ಯದಲ್ಲಿ ಮತಾಂತರ ನಿಯಂತ್ರಣ ಕಾಯ್ದೆ ಜಾರಿಗೊಳಿಸಿಯೇ ಸಿದ್ಧ. ಈ ಕುರಿತು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕಾಯ್ದೆಯ ಜಾರಿಗಾಗಿ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡುತ್ತೇವೆ'ಎಂದಿರುವುದಾಗಿ ಬಿಜೆಪಿ ಟ್ವೀಟಿಸಿದೆ.
ರಾಜ್ಯದಲ್ಲಿರುವಹಿಂದೂ ದೇವಾಲಯಗಳ ಮೇಲಿನ ಸರ್ಕಾರದ ಹಿಡಿತವನ್ನು ಸಡಿಲಗೊಳಿಸಿ, ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸುವುದಕ್ಕೂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ. ಹುಬ್ಬಳ್ಳಿಯಲ್ಲಿ ಬುಧವಾರ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಸಮಾರೋಪದಲ್ಲಿ ಅವರು ಈ ಬಗ್ಗೆ ಸುಳಿವು ನೀಡಿದ್ದಾರೆ.
ಈ ವಿಚಾರವಾಗಿ ಸಿಎಂ, 'ಕೊಪ್ಪಳದ ಅಂಜನಾದ್ರಿ ಬೆಟ್ಟವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಮಾಡುತ್ತೇವೆ.ದೇವಾಲಯಗಳನ್ನು ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸುತ್ತೇವೆ.ದೇವಾಲಯದ ಹಣ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆಯಾಗಬೇಕು, ಇದಕ್ಕಾಗಿ ಕಾನೂನು ರೂಪಿಸುತ್ತೇವೆ' ಎಂದು ಹೇಳಿರುವುದಾಗಿಯೂಮತ್ತೊಂದು ಟ್ವೀಟ್ನಲ್ಲಿ ತಿಳಿಸಿದೆ.
ಇವನ್ನೂ ಓದಿ
*ಮತಾಂತರ ನಿಷೇಧ ಕಾಯ್ದೆ: ಪ್ರತಿಭಟನೆ ಎಚ್ಚರಿಕೆ
*ಹಿಂದೂ ದೇವಾಲಯ ಸ್ವತಂತ್ರ, ಅಧಿವೇಶನಕ್ಕೆ ಮುನ್ನ ಕಾನೂನು ಜಾರಿ: ಸಿ.ಎಂ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.