ಬೆಂಗಳೂರು: ಕೃಷಿ ಉತ್ಪನ್ನಗಳ ಮುಕ್ತ ಮಾರಾಟಕ್ಕೆ ಅವಕಾಶ ಕಲ್ಪಿಸುವ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಮಸೂದೆ–2020ಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಡಿಸೆಂಬರ್ 30ರಂದು ಅಂಕಿತ ಹಾಕಿದ್ದು, ನೂತನ ಕಾಯ್ದೆ ಜಾರಿಗೊಳಿಸಿ ಗುರುವಾರ ಆದೇಶ ಹೊರಡಿಸಲಾಗಿದೆ.
ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಜಾರಿಗೊಳಿಸಿ ಎರಡು ಬಾರಿ ಸುಗ್ರೀವಾಜ್ಞೆ ಹೊರಡಿಸಲಾಗಿತ್ತು. ಈ ಕಾರಣದಿಂದ 2020ರ ಮೇ 16ರಿಂದ ಪೂರ್ವಾನ್ವಯವಾಗುವಂತೆ ಹೊಸ ಕಾಯ್ದೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ವರ್ತಕರು ನೇರವಾಗಿ ರೈತರಿಂದ ಕೃಷಿ ಉತ್ಪನ್ನಗಳನ್ನು ಖರೀದಿಸಲು ಅವಕಾಶ ಕಲ್ಪಿಸುವ ಮತ್ತು ಎಪಿಎಂಸಿ ಪ್ರಾಂಗಣಗಳ ಹೊರಗೆ ನಡೆಯುವ ಕೃಷಿ ಉತ್ಪನ್ನಗಳ ಮಾರಾಟದ ಮೇಲೆ ಸೆಸ್ ವಿಧಿಸುವುದನ್ನು ರದ್ದುಗೊಳಿಸುವ ತಿದ್ದುಪಡಿಯನ್ನು ಎಪಿಎಂಸಿ ಕಾಯ್ದೆಗೆ ತರಲಾಗಿದೆ. ವಿಧಾನಮಂಡಲದ ಕಳೆದ ಅಧಿವೇಶನದಲ್ಲಿ ಈ ಮಸೂದೆಗೆ ಒಪ್ಪಿಗೆ ದೊರಕಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.