ಮಂಡ್ಯ: ‘ಶಾಲಾ ಶಿಕ್ಷಕರು, ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಮಸ್ಯೆ ಬಗೆಹರಿಸಲು ಹೊಸ ಆ್ಯಪ್ ರೂಪಿಸಲಾಗಿದ್ದು, 20 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ತಿಳಿಸಿದರು.
ರಾಜ್ಯಶಾಸ್ತ್ರ ಅಕಾಡೆಮಿ ವತಿಯಿಂದ ಬುಧವಾರ ಆಯೋಜಿಸಿದ್ದ ಶೈಕ್ಷಣಿಕ ಸಮಾವೇಶದಲ್ಲಿ ಮಾತನಾಡಿದ ಅವರು, ‘ಶಿಕ್ಷಕರು, ಉಪನ್ಯಾಸಕರು ಇನ್ನು ಮುಂದೆ ಪಾಠ ಬೋಧನೆ ಬಿಟ್ಟು ಡಿಡಿಪಿಐ, ಡಿಡಿಪಿಯು ಕಚೇರಿಗಳಿಗೆ ಅಲೆಯಬೇಕಾಗಿಲ್ಲ. ಅದನ್ನು ತಪ್ಪಿಸುವ ಉದ್ದೇಶದಿಂದ ಆ್ಯಪ್ ರೂಪಿಸಲಾಗಿದೆ. ಆ್ಯಪ್ ಮೂಲಕ ಸಮಸ್ಯೆ ಹಂಚಿಕೊಂಡರೆ ತಕ್ಷಣ ಪರಿಹಾರ ದೊರೆಯಲಿದೆ’ ಎಂದರು.
‘ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡುವುದರಿಂದ ಬೋಧನೆಗೆ ತೊಂದರೆಯಾಗುತ್ತಿದೆ. ಕೆಲವು ಶಿಕ್ಷಕರು, ಪಿಯು ಕಾಲೇಜು ಉಪನ್ಯಾಸಕರಿಗೆ ತಿಂಗಳುಗಟ್ಟಲೇ ಚುನಾವಣಾ ಜವಾಬ್ದಾರಿ ನೀಡುತ್ತಿರು
ವುದು ಸರಿಯಲ್ಲ. ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡದಂತೆ ಕೋರಿ ಮುಖ್ಯ ಚುನಾವಣಾ
ಧಿಕಾರಿಗೆ ಪತ್ರ ಬರೆದಿದ್ದೇನೆ’ ಎಂದು ತಿಳಿಸಿದರು.
ವರ್ಗಾವಣೆಗೆ ಹೊಸ ಕಾಯ್ದೆ: ‘ಸಚಿವನಾಗಿ ಅಧಿಕಾರ ವಹಿಸಿಕೊಂಡ ದಿನವೇ ನನ್ನ ಮುಂದೆ ವರ್ಗಾವಣೆ ನೀತಿಯ ಸಮಸ್ಯೆ ಎದುರಾಯಿತು. ಕಡ್ಡಾಯ ವರ್ಗಾವಣೆ ಎಂಬುದು ಶಿಕ್ಷೆಯಾಗಿದೆ. ಇದರಿಂದ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ. ಇಷ್ಟಪಟ್ಟು ಕೆಲಸ ಮಾಡುವ ಸ್ಥಳಗಳಿಗೆ ಶಿಕ್ಷಕರ ವರ್ಗಾವಣೆಯಾಗಬೇಕು. ಶಿಕ್ಷಕ ಸ್ನೇಹಿ ವರ್ಗಾವಣೆ ನೀತಿ ಜಾರಿಗೊಳಿಸಲು ಹೊಸ ಕಾಯ್ದೆ ರೂಪಿಸಲಾಗುತ್ತಿದೆ. ಮಸೂದೆಯನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲಾಗುವುದು’ ಎಂದು ತಿಳಿಸಿದರು.
ಪದವಿಪೂರ್ವ ಕಾಲೇಜುಗಳಲ್ಲಿನ ಡಿ ಗ್ರೂಪ್ ಹುದ್ದೆಗಳ ನೇಮಕಾತಿ ಪ್ರಸ್ತಾವವನ್ನು ಈ ಬಾರಿ ಬಜೆಟ್ನಲ್ಲಿ ಸೇರ್ಪಡೆ ಮಾಡಲಾಗುವುದು. 600 ಪಿಯು ಕಾಲೇಜುಗಳಲ್ಲಿ ಖಾಲಿ ಉಳಿದಿರುವ ಪ್ರಾಂಶುಪಾಲರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದರು.
ಬಹುತೇಕ ಶಾಲೆ, ಕಾಲೇಜುಗಳಲ್ಲಿ ಶೌಚಾಲಯ ಇಲ್ಲದಿರುವುದು ಖೇದಕರ. ಆ ಬಗ್ಗೆ ಪಟ್ಟಿ ಪಡೆದು ಶೀಘ್ರದಲ್ಲಿ ಶೌಚಾಲಯ ನಿರ್ಮಿಸಲು ಕ್ರಮ ವಹಿಸಲಾಗುವುದು
-ಎಸ್.ಸುರೇಶ್ಕುಮಾರ್ ಶಿಕ್ಷಣ ಸಚಿವ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.