ನವದೆಹಲಿ: ರಾಯಚೂರು ನಗರದಲ್ಲಿ ಏಮ್ಸ್ ಸ್ಥಾಪಿಸಬೇಕು ಎಂದು ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಅವರು ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವಿಯಾ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ಭೇಟಿಯ ನಂತರ ಶರಣ ಪ್ರಕಾಶ ಪಾಟೀಲ ಮಾತನಾಡಿ, ‘ರಾಯಚೂರು ನಗರದಲ್ಲಿ ಏಮ್ಸ್ ಸ್ಥಾಪನೆ ಆಗಬೇಕೆಂದು ನಡೆಸಲಾಗುತ್ತಿರುವ ಹೋರಾಟ 636 ದಿನಗಳಿಗೆ ತಲುಪಿದೆ. ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವುದರಿಂದ ಆಗುವ ಅನುಕೂಲತೆಗಳ ಬಗ್ಗೆ, ಜನರ ಜೀವನ ಮಟ್ಟದಲ್ಲಾಗುವ ಬದಲಾವಣೆಗಳ ಬಗ್ಗೆ ವಿವರವಾಗಿ ಸಚಿವರಿಗೆ ತಿಳಿಸಲಾಗಿದೆ. ಬಜೆಟ್ ಅಧಿವೇಶನ ಮುಗಿಯುವ ಮುನ್ನವೇ ಘೋಷಣೆ ಮಾಡುವಂತೆಯೂ ಒತ್ತಾಯಿಸಲಾಗಿದೆ’ ಎಂದರು.
ಎನ್.ಎಸ್. ಭೋಸರಾಜು ಮಾತನಾಡಿ, ‘ರಾಯಚೂರು ಜಿಲ್ಲೆಯು ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಒಂದು. ಈ ಜಿಲ್ಲೆಯ ಸರ್ವತೋಮುಖ ಅಭಿವೃದ್ದಿಗಾಗಿ ಏಮ್ಸ್ ಸ್ಥಾಪನೆ ಆಗಬೇಕು ಎನ್ನುವುದು ಜಿಲ್ಲೆಯ ನಾಗರಿಕರ ಬಹುದಿನಗಳ ಬೇಡಿಕೆ. ಈ ಸಂಬಂಧ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಕೇಂದ್ರ ಸಚಿವರಿಗೆ ಮತ್ತೊಮ್ಮೆ ಮನವಿ ಸಲ್ಲಿಸಲಾಗಿದೆ. ಅಲ್ಲದೇ, ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಬರೆದಿರುವ ಮೂರು ಪತ್ರಗಳನ್ನೂ ನೀಡಿದ್ದೇವೆ. ಈ ಬಗ್ಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.