ADVERTISEMENT

ರೋಹಿಣಿ ಸಿಂಧೂರಿ ಅವರನ್ನು ಭೂ ಹಗರಣಗಳ ತನಿಖಾಧಿಕಾರಿಯನ್ನಾಗಿ ನೇಮಿಸಿ: ವಿಶ್ವನಾಥ್‌

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 7:14 IST
Last Updated 10 ಜೂನ್ 2021, 7:14 IST
ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌
ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌   

ಮೈಸೂರು: ‘ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮೈಸೂರು ನಗರ ಹಾಗೂ ಸುತ್ತಮುತ್ತ ಆಗಿರುವ ಭೂ ಹಗರಣಗಳನ್ನು ಬಯಲಿಗೆಳೆಯಲು ವಿಶೇಷ ತನಿಖಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಬೇಕು’ ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಆಗ್ರಹಿಸಿದರು.

ಮೈಸೂರಿನಲ್ಲಿ ಗುರುವಾರ ಮಾಧ್ಯಮದವರ ಜತೆ ಮಾತನಾಡಿ, ರೋಹಿಣಿ ಅವರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಮೈಸೂರಿನ ಕೆಲವು ಭೂಹಗರಣಗಳನ್ನು ಬಯಲಿಗೆಳೆದಿದ್ದಾರೆ. ಎಲ್ಲೆಲ್ಲಿ ಒತ್ತುವರಿ ಆಗಿದೆ ಎಂಬ ನಿಖರ ಮಾಹಿತಿ ಅವರಲ್ಲಿದೆ. ಆದ್ದರಿಂದ ಆರು ತಿಂಗಳ ಅವಧಿಗೆ ಅವರನ್ನು ವಿಶೇಷಾಧಿಕಾರಿಯಾಗಿ ನೇಮಿಸಬೇಕು ಎಂದು ಒತ್ತಾಯಿಸಿದರು.

‘ಶನಿವಾರ ಬೆಂಗಳೂರಿಗೆ ಹೋಗಲಿದ್ದು, ಕಂದಾಯ ಇಲಾಖೆ ಅಧಿಕಾರಿಗಳನ್ನು ಭೇಟಿಯಾಗಿ ಈ ಬಗ್ಗೆ ಅವರಿಗೆ ಮನವಿ ಮಾಡುತ್ತೇನೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಅವರಿಗೂ ಮನವಿ ಪತ್ರ ಸಲ್ಲಿಸುತ್ತೇನೆ’ ಎಂದರು.

ADVERTISEMENT

‘ರಾಜಕಾಲುವೆ ಮೇಲೆ ಕಲ್ಯಾಣ ಮಂಟಪ ನಿರ್ಮಾಣ ಆಗಿದೆ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ. ಮೈಸೂರಿನಲ್ಲಿ ಒಂದು ಗುಂಟೆ ಅಲ್ಲ, ಸಾವಿರಾರು ಎಕರೆ ಭೂಮಿ ಒತ್ತುವರಿ ಆಗಿದೆ. ತನಿಖೆಯಿಂದ ಎಲ್ಲರೂ ಹೊರಬರಲಿ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.