ಬೆಂಗಳೂರು: ರಾಜ್ಯದ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಅಭ್ಯರ್ಥಿಗಳ ಜಾತಿ ಹಾಗೂ ಆದಾಯ ಪ್ರಮಾಣಪತ್ರ ಸಲ್ಲಿಕೆಯಲ್ಲಿ ಉಂಟಾಗಿರುವ ಗೊಂದಲದ ಪರಿಣಾಮ, 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯು ಈ ಕುರಿತ ರಿಟ್ ಅರ್ಜಿ ಮೇಲಿನ ಅಂತಿಮ ಆದೇಶಕ್ಕೆ
ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.
‘ನವೆಂಬರ್ 18ರಂದು ಪ್ರಕಟಿಸಿರುವ 1:1ರ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರದ್ದುಗೊಳಿಸಬೇಕು‘ ಎಂದು ಕೋರಿ ಶಿಕಾರಿಪುರದ ಝೀಬಾ ತರನ್ನುಮ್ ಸೇರಿ 40ಕ್ಕೂ ಹೆಚ್ಚು ಜನರು ಸಲ್ಲಿಸಿರುವ ರಿಟ್ ಅರ್ಜಿಗಳ ವಿಚಾರಣೆ ನಡೆಸಿದನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
ಪ್ರಕರಣದ ಪ್ರತಿವಾದಿಗಳಾದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸೇರಿದಂತೆ ಪ್ರಕರಣದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿದೆ.
ಆಕ್ಷೇಪವೇನು?: ‘ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ನವೆಂಬರ್ 18ರಂದು ಪ್ರಕಟಿಸಲಾಗಿದ್ದ 1:1ರ ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅರ್ಜಿದಾರರಿಗಿಂತ ಕಡಿಮೆ ಅಂಕ ಪಡೆದಿರುವವರ ಅಭ್ಯರ್ಥಿಗಳ ಹೆಸರುಗಳಿವೆ. ಈ ಬಗ್ಗೆ ಡಿಡಿಪಿಐ ಗಳನ್ನು ವಿಚಾರಿಸಿದಾಗ ಮದುವೆಯಾಗಿರುವ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ/ಜಾತಿ ಪ್ರಮಾಣಪತ್ರದ ಬದಲಾಗಿ ತಂದೆಯ ಆದಾಯ/ಜಾತಿ ಪ್ರಮಾಣಪತ್ರವನ್ನು ಸಲ್ಲಿಸಲಾಗಿದೆ ಎಂಬ ಕಾರಣಕ್ಕೆ ಅವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಜತೆಗೆ, ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿ ನೀಡದೆ, ಸಾಮಾನ್ಯ ಆಭ್ಯರ್ಥಿಗಳ ವರ್ಗಕ್ಕೆ ಸೇರ್ಪಡೆ ಮಾಡಲಾಗಿದೆ‘ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.