ಬೆಂಗಳೂರು: ‘ಹಿಂದೂ ಧರ್ಮವನ್ನು ಒಡೆಯುವ ಸಂಚಿನ ಭಾಗವಾಗಿ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಜಾತಿವಾರು ಸಮೀಕ್ಷೆ ನಡೆಸುತ್ತಿದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದರು.
ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಎಲ್ಲ ಜಾತಿಗಳ ಜನರು ಮತಾಂತರವನ್ನು ವಿರೋಧಿಸಿದ್ದಾರೆ. ಕುರುಬ, ಬ್ರಾಹ್ಮಣ, ವಿಶ್ವಕರ್ಮ ಹೀಗೆ ಎಲ್ಲ ಜಾತಿಗಳ ಮುಂದೆ ಕ್ರಿಶ್ಚಿಯನ್ ಎಂಬ ಹೆಸರು ತರಲಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕ್ರೈಸ್ತರಾಗಿದ್ದು, ಅವರನ್ನು ಮೆಚ್ಚಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಈ ರೀತಿ ಮಾಡುತ್ತಿದೆ’ ಎಂದರು.
‘ಇದು ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆಯಾಗಿದ್ದರೆ, ಅದರಲ್ಲಿ ಜಾತಿಗಳ ಹೆಸರನ್ನು ಏಕೆ ಉಲ್ಲೇಖಿಸಬೇಕು? ಇಲ್ಲದೇ ಇರುವ ಜಾತಿಗಳ ಹೆಸರನ್ನು ಏಕೆ ಸೇರಿಸಬೇಕು? ಇದು ಹಿಂದೂ ಧರ್ಮವನ್ನು ಒಡೆಯುವ ಹುನ್ನಾರವಲ್ಲದೆ ಬೇರೇನಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಮತಾಂತರವನ್ನು ತಡೆಯುವುದು ಸರ್ಕಾರದ ಹೊಣೆಗಾರಿಕೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಾಂತರವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರದ ಕೆಲವು ಸಚಿವರು ಈ ಸಮೀಕ್ಷೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅವರು ಕೇವಲ ಹೇಳಿಕೆ ಕೊಟ್ಟು, ನಾಟಕವಾಡುತ್ತಿದ್ದಾರೆ. ಅವರ ಸಮುದಾಯದ ಜನರೇ ಇದನ್ನು ಸಹಿಸುವುದಿಲ್ಲ. ಅಂತಹ ಸಚಿವರು ರಾಜೀನಾಮೆ ಕೊಡಬೇಕು’ ಎಂದು ಒತ್ತಾಯಿಸಿದರು.
‘ರಾಹುಲ್ ಗಾಂಧಿ ಅವರ ಅಪ್ಪಣೆಯಂತೆ ಈ ಸರ್ಕಾರ ಹಿಂದೂ ವಿರೋಧಿ ಕೆಲಸ ಮಾಡುತ್ತಿದೆ. ಹಿಂದೂ ಧರ್ಮಕ್ಕೆ ಅಪಮಾನ ಮಾಡುವುದು, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವುದು ಮೊದಲಾದ ಕೆಲಸಗಳನ್ನು ಸರ್ಕಾರ ಮಾಡುತ್ತಿದೆ. ಸಾಹಿತಿ ಬಾನು ಮುಷ್ತಾಕ್ ಅವರಿಗೆ ಯಾವ ಅರ್ಹತೆ ಇದೆಯೆಂದು ಚಾಮುಂಡೇಶ್ವರಿ ಪೂಜೆಗೆ ಕರೆಸಿದ್ದಾರೆ ಎಂದು ತಿಳಿದಿಲ್ಲ’ ಎಂದರು.
ಹಿಂದೂ ಧರ್ಮದ ಬಲವನ್ನು ಕುಗ್ಗಿಸುವ ಕಾಂಗ್ರೆಸ್ನ ಸಂಚನ್ನು ಜಾರಿಗೆ ತರುವಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕರ್ನಾಟಕವನ್ನು ಪ್ರಯೋಗಶಾಲೆ ಮಾಡಿಕೊಳ್ಳಲಾಗಿದೆಆರ್.ಅಶೋಕ ವಿಧಾನಸಭೆ ವಿರೋಧ ಪಕ್ಷದ ನಾಯಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.