ಶಿರಸಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ‘ಅಡಿಕೆ ಕ್ಯಾನ್ಸರ್ಕಾರಕ’ ಎಂದು ಲೋಕಸಭೆಯಲ್ಲಿ ನೀಡಿರುವ ಹೇಳಿಕೆ ಅಡಿಕೆ ಬೆಳೆಗಾರರನ್ನು ಬೆಚ್ಚಿಬೀಳಿಸಿದೆ.
ಸರ್ಕಾರಿ ಸಂಸ್ಥೆಗಳ ಸಂಶೋಧನಾ ವರದಿಗಳೇ ಅಡಿಕೆ ಸೇವನೆ ಆರೋಗ್ಯಕ್ಕೆ ಪೂರಕ ಎಂದು ದೃಢಪಡಿಸಿರುವಾಗ, ಇದಕ್ಕೆ ವ್ಯತಿರಿಕ್ತವಾಗಿ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಗೆ ಆಕ್ಷೇಪ ವ್ಯಕ್ತವಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರು ಸಂಸದರೊಬ್ಬರ ಪ್ರಶ್ನೆಗೆ, ಅಡಿಕೆ ಆರೋಗ್ಯಕ್ಕೆ ಹಾನಿಕರ ಹೌದು ಎಂಬ ಉತ್ತರ ನೀಡಿರುವ ಬೆನ್ನಲ್ಲೇ, ಅಡಿಕೆ ಮಾರುಕಟ್ಟೆಯಲ್ಲಿ ದರ ಕುಸಿತ ಆಗುವ ಆತಂಕ ಎದುರಾಗಿದೆ.
‘ಅಡಿಕೆಯಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶಗಳಿವೆ ಎಂಬ ಸಂಗತಿಯನ್ನು ಮುಂದಿಟ್ಟು, 2011ರಲ್ಲಿ ಅಡಿಕೆ ನಿಷೇಧ ಜಾರಿಗೆ ಅಂದಿನ ಸರ್ಕಾರ ಯೋಚಿಸಿತ್ತು. ಸುಪ್ರೀಂ ಕೋರ್ಟ್ನಲ್ಲಿ ಈ ವಿಷಯ ವಿಚಾರಣೆ ಬಾಕಿಯಿದೆ. ಅಡಿಕೆ ಬೆಳೆಯುವ ಭಾಗದ ಸಂಸದರು ಒಟ್ಟಾಗಿ, ರಾಜ್ಯದ ವಿವಿಧ ಸಂಶೋಧನಾ ಕೇಂದ್ರಗಳು ಅಡಿಕೆ ಪೂರಕವಾಗಿ ನೀಡಿರುವ ವರದಿಯನ್ನು ಪರಿಣಾಮಕಾರಿಯಾಗಿ ಸುಪ್ರೀಂ ಕೋರ್ಟ್ಗೆ ಸಲ್ಲಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು’ ಎಂದು ಇಲ್ಲಿನ ಅಡಿಕೆ, ಕಾಳುಮೆಣಸು, ಯಾಲಕ್ಕಿ ವ್ಯಾಪಾರಸ್ಥರ ಸಂಘದ ಉಪಾಧ್ಯಕ್ಷ ಲಕ್ಷ್ಮೀನಾರಾಯಣ ಹೆಗಡೆ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.