ಬೆಂಗಳೂರು: 'ಆರೋಗ್ಯ ಸೇತು ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಯಾವುದೇ ಆದೇಶ ಹೊರಡಿಸಿಲ್ಲ. ಹಾಗೊಂದು ವೇಳೆ ಆ್ಯಪ್ ಬಳಕೆ ಕಡ್ಡಾಯ ಮಾಡಿ ಯಾವುದಾದರೂ ಸರ್ಕಾರಿ ಪ್ರಾಧಿಕಾರ ಒತ್ತಾಯ ಮಾಡಿದ್ದರೆ, ಅಂತಹ ದಾಖಲೆಗಳನ್ನು ಅರ್ಜಿದಾರರು ಕೋರ್ಟ್ಗೆ ಸಲ್ಲಿಸಬಹುದು' ಎಂದು ಕೇಂದ್ರ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
'ಆರೋಗ್ಯ ಆ್ಯಪ್ ಸೇತು ಬಳಕೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ' ಎಂದು ಆಕ್ಷೇಪಿಸಿ ಡಿಜಿಟಲ್ ವಲಯದಲ್ಲಿನ ನಾಗರಿಕರ ಹಕ್ಕುಗಳ ರಕ್ಷಣೆ ಹೋರಾಟಗಾರ ಅನಿವರ್ ಎ. ಅರವಿಂದ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, 'ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಈ ಹಿಂದಿನ ವಿಚಾರಣೆ ವೇಳೆ ಹೈಕೋರ್ಟ್ಗೆ ತಿಳಿಸಿತ್ತು. ಆದರೆ, ದೇಶದಾದ್ಯಂತ ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸಿದೆ' ಎಂದು ದೂರಿದರು.
ಅದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರದ ಪರ ವಕೀಲರು, ಈ ಸ್ಪಷ್ಟನೆ ನೀಡಿದರು.
ವಿಚಾರಣೆಯನ್ನು ಇದೇ 17ಕ್ಕೆ ಮುಂದೂಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.