ADVERTISEMENT

ಇ–ಸಮೀಕ್ಷೆ ನಡೆಸದಿರಲು ‌‘ಆಶಾ’ ತೀರ್ಮಾನ

ಮೊಬೈಲ್ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 18:42 IST
Last Updated 9 ಮಾರ್ಚ್ 2021, 18:42 IST
ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರು
ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರು    

ಬೆಂಗಳೂರು: ಮೊಬೈಲ್ ಪೋನ್, ಇಂಟರ್‌ನೆಟ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸರ್ಕಾರ ಒದಗಿಸದ ಕಾರಣ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಇ–ಸಮೀಕ್ಷೆಗಳನ್ನು ನಡೆಸದಿರಲು ತೀರ್ಮಾನಿಸಿದ್ದಾರೆ.

ಈ ಸಂಬಂಧ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಿಗೆ ಪತ್ರ ಬರೆದಿದೆ. ಸಾಂಕ್ರಾಮಿಕವಲ್ಲದ ರೋಗಗಳ ಸಮೀಕ್ಷೆ, 0–18 ವರ್ಷದ ಮಕ್ಕಳ ಮನೆ ಮನೆ ಸಮೀಕ್ಷೆ ಸೇರಿದಂತೆ ವಿವಿಧ ಸಮೀಕ್ಷೆಗಳಿಗೆ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ. ಈ ಸಮೀಕ್ಷೆಗಳನ್ನು ಮೊಬೈಲ್ ಆ್ಯಪ್‌ಗಳ ನೆರವಿನಿಂದ ನಡೆಸಲು ಸೂಚಿಸಿ, ತರಬೇತಿ ನೀಡಲಾಗುತ್ತಿದೆ. ಎಲ್ಲ ಆಶಾ ಕಾರ್ಯಕರ್ತೆಯರ ಬಳಿ ಸ್ಮಾರ್ಟ್‌ ಫೋನ್‌ಗಳು ಇರುವುದಿಲ್ಲ. ಹಲವರಿಗೆ ಸ್ಮಾರ್ಟ್‌ ಫೋನ್‌ಗಳ ನಿರ್ವಹಣೆ ತಿಳಿದಿಲ್ಲ. ಕೋವಿಡ್‌ನಿಂದಾಗಿ ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಹೊಸ ಮೊಬೈಲ್‌ಗಳನ್ನು ಖರೀದಿಸಲು ಸಾಧ್ಯವಿಲ್ಲ. ಹಾಗಾಗಿ, ಸಮೀಕ್ಷೆಗಳನ್ನು ಮಾಡದಿರಲು ನಿರ್ಧರಿಸಿದ್ದೇವೆ ಎಂದು ಸಂಘದ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದ್ದಾರೆ.

‘ಆಶಾ ಕಾರ್ಯಕರ್ತೆಯರಿಗೆ ಮೊಬೈಲ್, ಇಂಟರ್‌ನೆಟ್‌ ಒದಗಿಸಿದಲ್ಲಿ ಸಮೀಕ್ಷೆಗಳನ್ನು ನಡೆಸಲು ಸಾಧ್ಯವಾಗುತ್ತದೆ. ಮೊಬೈಲ್ ಮತ್ತು ಟ್ಯಾಬ್ ಬಳಸಲು ಬರದವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಅಂತಹವರಿಗೆ ಲಿಖಿತ ರೂಪದಲ್ಲಿ ಸಮೀಕ್ಷೆ ನಡೆಸಲು ಅವಕಾಶ ನೀಡಬೇಕು. ಸಮೀಕ್ಷೆಗಳನ್ನು ನಡೆಸಲು ಸೂಕ್ತ ಸಂಭಾವನೆ ಹಾಗೂ ಸಮಯ ನೀಡಬೇಕು. ಸಮೀಕ್ಷೆಗಳಲ್ಲಿ ಆರೋಗ್ಯದ ಜತೆಗೆ ಆರ್ಥಿಕ ಮಾಹಿತಿಗಳನ್ನೂ ಕಲೆಹಾಕುವಂತೆ ಸೂಚಿಸಲಾಗಿದೆ. ಆದರೆ, ಜನಸಾಮಾನ್ಯರು ಆರ್ಥಿಕ ಮಾಹಿತಿ ನೀಡಲು ನಿರಾಕರಿಸುತ್ತಾರೆ. ಹಾಗಾಗಿ, ಅದನ್ನು ಕೈಬಿಡಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.