ಬೆಂಗಳೂರು: ‘ಪಂಚರಾಜ್ಯ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ. ಈ ಹಿನ್ನಡೆಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯ ಕೋಮುವಾದದ ರಾಜಕಾರಣ ಉತ್ತರಪ್ರದೇಶದಲ್ಲಿ ಯಶಸ್ವಿಯಾಗಿದೆ ಎನ್ನುವುದು ಈ ಫಲಿತಾಂಶದಲ್ಲಿ ಸ್ಪಷ್ಟವಾಗುತ್ತಿದೆ. ಇದು ಬಹಳ ಕಳವಳಕಾರಿ ಬೆಳವಣಿಗೆ’ ಎಂದು ಅಭಿಪ್ರಾಯಪಟ್ಟರು.
‘ಸಂವಿಧಾನದ ಆಶಯಗಳನ್ನು ಸಿದ್ಧಾಂತವಾಗಿ ನಂಬಿರುವ ಪಕ್ಷ ಕಾಂಗ್ರೆಸ್. ಈ ಸಿದ್ಧಾಂತದ ಆಧಾರದಲ್ಲಿಯೇ ಪಕ್ಷವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡುತ್ತೇವೆ’ ಎಂದರು.
‘ಪ್ರತಿಯೊಂದು ರಾಜ್ಯದ ರಾಜಕಾರಣ ಮತ್ತೊಂದು ರಾಜ್ಯದ ರಾಜಕಾರಣಕ್ಕಿಂತ ಭಿನ್ನವಾಗಿರುತ್ತದೆ. ಉದಾಹರಣೆಗೆ, ಉತ್ತರಪ್ರದೇಶದಲ್ಲಿ ನಮ್ಮ ಪಕ್ಷದ ಸಂಘಟನೆ ಸ್ವಲ್ಪ ದುರ್ಬಲವಾಗಿದೆ. ಅಲ್ಲಿ ಜನತೆಯ ಬೆಂಬಲ ಇದೆ. ಆ ಬೆಂಬಲವನ್ನು ಮತಗಳನ್ನಾಗಿ ಪರಿವರ್ತಿಸುವ ಸಂಘಟನೆ ಕೊರತೆ ಇದೆ. ಅದನ್ನು ಸರಿಪಡಿಸಬೇಕು. ಕರ್ನಾಟಕದಲ್ಲಿ ನಮಗೆ ಜನರ ಬೆಂಬಲವೂ ಇದೆ. ಅದನ್ನು ಮತಗಳನ್ನಾಗಿ ಪರಿವರ್ತಿಸುವ ಪಕ್ಷದ ಸಂಘಟನೆಯೂ ಬಲವಾಗಿದೆ‘ ಎಂದರು.
‘ನಮ್ಮ ಹಿಂದಿನ ಸರ್ಕಾರದ ಸಾಧನೆ ಕೂಡಾ ಜನರ ಮುಂದಿದೆ. ಆದ್ದರಿಂದ, ಐದು ರಾಜ್ಯಗಳ ಚುನಾವಣೆ ನಮ್ಮ ರಾಜ್ಯದ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದೂ ಹೇಳಿದರು.
‘ಚುನಾವಣೆಗಳ ಫಲಿತಾಂಶ ಎನ್ನುವುದು ಜನತೆಯ ಅಭಿಪ್ರಾಯ ಅರಿತುಕೊಳ್ಳಲು ಇರುವ ಅವಕಾಶ. ಅದನ್ನು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟವರೆಲ್ಲರೂ ಗೌರವಿಸಬೇಕು. ನಾನು ಗೆದ್ದ ಅಭ್ಯರ್ಥಿಗಳನ್ನು ಅಭಿನಂದಿಸುತ್ತೇನೆ’ ಎಂದರು.
ಇದನ್ನೂ ಓದಿ–Election Results 2022 LIVE | ಮುಂದಿನ ವರ್ಷ ಕರ್ನಾಟಕದಲ್ಲೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ: ಸಿಎಂ ಬೊಮ್ಮಾಯಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.