ADVERTISEMENT

ಎನ್‌ಇಪಿಯಲ್ಲಿ ಸ್ಥಳೀಯ ಇತಿಹಾಸ ಕಡೆಗಣನೆ: ಕ್ರಮಕ್ಕೆ ಯು.ಟಿ. ಖಾದರ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 5:16 IST
Last Updated 24 ಸೆಪ್ಟೆಂಬರ್ 2022, 5:16 IST
ಯು.ಟಿ. ಖಾದರ್‌
ಯು.ಟಿ. ಖಾದರ್‌   

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ಸ್ಥಳೀಯ ಇತಿಹಾಸಕ್ಕೆ ಸಂಬಂಧಿಸಿದ ಪಠ್ಯಕ್ರಮ ಅಳವಡಿಕೆ ಮಾಡುವಲ್ಲಿ ವಿಫಲವಾಗಿರುವ ಮಂಗಳೂರು ವಿಶ್ವವಿದ್ಯಾಲಯದ ವಿರುದ್ಧ ಕ್ರಮ ಜರು ಗಿಸಬೇಕು ಎಂದು ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್‌ ಸರ್ಕಾರವನ್ನು ಆಗ್ರಹಿಸಿದರು.

ಗುರುವಾರ ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯ ಸ್ಥಳೀಯ ಇತಿಹಾಸಕ್ಕೆ ಸಂಬಂಧಿಸಿದ ಪಠ್ಯ ಅಳವಡಿಸಲು ಅವಕಾಶವಿತ್ತು. ಆದರೆ, ರಾಜ್ಯ ಉನ್ನತ ಶಿಕ್ಷಣ ಪರಿಷತ್‌ಗೆ ಪ್ರಸ್ತಾವ ಸಲ್ಲಿಸಿ, ಒಪ್ಪಿಗೆ ಪಡೆಯಬೇಕಿತ್ತು. ಆದರೆ, ಮಂಗಳೂರು ವಿಶ್ವವಿದ್ಯಾಲಯದ ಅಧಿಕಾರಿಗಳು ಈ ಕೆಲಸ ಮಾಡದೆ ಲೋಪ ಎಸಗಿದ್ದಾರೆ’ ಎಂದರು.

ಉತ್ತರ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ, ‘ಈ ವಿಚಾರದಲ್ಲಿ ವಿಶ್ವವಿದ್ಯಾಲಯದ ಆಡಳಿತವೇ ಕ್ರಮ ಕೈಗೊಳ್ಳಬೇಕಿತ್ತು. ಸರ್ಕಾರದ ಪಾತ್ರ ಏನೂ ಇಲ್ಲ. ವಿಶ್ವವಿದ್ಯಾಲಯ ಪಠ್ಯಕ್ರಮ ಅಳವಡಿಸಲು ಪ್ರಸ್ತಾವ ಸಲ್ಲಿಸಿದ್ದರೆ ಉನ್ನತ ಶಿಕ್ಷಣ ಪರಿಷತ್‌ ಅನುಮೋದನೆ ನೀಡುತ್ತಿತ್ತು’ ಎಂದು ತಿಳಿಸಿದರು.

ADVERTISEMENT

‘ತಪ್ಪು ಮಾಡಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಬೇಕು’ ಎಂದು ಖಾದರ್‌ ಆಗ್ರಹಿಸಿದರು. ಎಚ್ಚರಿಕೆ ನೀಡುವಂತೆ ಸ್ಪೀಕರ್‌ ಕಾಗೇರಿ ಕೂಡ ಸೂಚಿಸಿದರು. ಇದಕ್ಕೆ ಸಚಿವರು ಒಪ್ಪಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.