
ಬೆಂಗಳೂರು: ‘ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನವನ್ನು ಜ್ಞಾನಜ್ಯೋತಿ ಸಭಾಂಗಣದಲ್ಲಿ ಇದೇ 25ರಂದು ಹಮ್ಮಿಕೊಳ್ಳಲಾಗಿದೆ’ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ವಾಜಪೇಯಿ ಅವರ ಜನ್ಮದಿನವನ್ನು ‘ಸುಶಾಸನ ದಿನ’ವಾಗಿ ದೇಶದಾದ್ಯಂತ ಆಚರಿಸಲಾಗುತ್ತಿದೆ. ಪ್ರತಿಷ್ಠಾನವು ವಾಜಪೇಯಿ ಅವರ ಗೌರವಾರ್ಥ ಪ್ರತಿವರ್ಷ ಸುಶಾಸನ ದಿನವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಈ ಬಾರಿ ‘ಶಿಕ್ಷಣದಲ್ಲಿ ಸುಶಾಸನ’ ಎಂಬ ಕಾರ್ಯಕ್ರಮವನ್ನು ಮಧ್ಯಾಹ್ನ 1 ಗಂಟೆಯಿಂದ ಸಂಜೆ 7ರವರೆಗೆ ಆಯೋಜಿಸಲಾಗಿದೆ’ ಎಂದರು.
‘ಕಾರ್ಯಕ್ರಮವನ್ನು ಎರಡು ಭಾಗವಾಗಿ ಮಾಡಲಾಗಿದ್ದು, ಮೊದಲು ಸಂವಾದ ನಡೆಯಲಿದೆ. ಸಾರ್ವಜನಿಕ ವಿಶ್ವವಿದ್ಯಾಲಯ, ಪಠ್ಯಕ್ರಮ, ಕೃತಕ ಬುದ್ಧಿಮತ್ತೆ ಕುರಿತಂತೆ ಸಂವಾದ ನಡೆಯಲಿದೆ. ಸಾಯಿ ಸ್ವಾಮಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಿಕ್ಷಣ- ತಂತ್ರಜ್ಞಾನ ಕ್ಷೇತ್ರದ 15 ಜನ ತಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ’ ಎಂದರು.
‘ಎರಡನೇ ಭಾಗದಲ್ಲಿ ಅಟಲ್ ಪುರಸ್ಕಾರ ಪ್ರದಾನ ನಡೆಯಲಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಬಸವರಾಜ ಬೊಮ್ಮಾಯಿ, ಸಂಸ್ಥೆಯ ಅಧ್ಯಕ್ಷ ಪ್ರೊ. ಕೃಷ್ಣೇಗೌಡ ಭಾಗವಹಿಸುತ್ತಾರೆ. ಆನ್ಲೈನ್ ನೋಂದಣಿಗೆ ಅವಕಾಶವಿದೆ’ ಎಂದೂ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.