ಬೆಂಗಳೂರು: ಪಾದರಾಯನಪುರದಲ್ಲಿ ನಿನ್ನೆ ರಾತ್ರಿ ನಡೆದ ಗಲಾಟೆ ಹಿಂದೆ ನನ್ನ ಹೆಸರು ಕೆಡಿಸುವ ರಾಜಕೀಯ ಪಿತೂರಿ ಇರಬಹುದೆಂಬ ಸಂಶಯ ನನಗಿದೆ. ಈ ಬಗ್ಗೆ ನಾನೂ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಅವೆಲ್ಲವನ್ನೂ ನಾನು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪಾದರಾಯನಪುರದಲ್ಲಿ ಭಾನುವಾರ ರಾತ್ರಿ ಅಹಿತಕರ ಘಟನೆ ನಡೆದ ಕ್ಷಣದಿಂದ ನಾನು ಪೊಲೀಸರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ರಾತ್ರಿಯೇ ಜನತೆ ಮತ್ತು ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಹೇಳಿದ್ದೇನೆ ಎಂದಿದ್ದಾರೆ.
ಕೊರೊನಾ ಸೋಂಕು ಹರಡದಂತೆ ರಾತ್ರಿ ಹಗಲು ಶ್ರಮಿಸುತ್ತಿರುವ ಪೊಲೀಸ್ ಮತ್ತು ವೈದ್ಯಕೀಯ ಸಿಬ್ಬಂದಿಗಳ ಜೊತೆ ಸಹಕರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಏನಾದರೂ ಸಮಸ್ಯೆಗಳಿದ್ದರೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಬೇಕೇ ಹೊರತು ಕಾನೂನು ಉಲ್ಲಂಘನೆ ಮಾಡಿ ದಾಂಧಲೆ ಮಾಡುವುದಲ್ಲ ಎಂದಿದ್ದಾರೆ.
ಪಾದರಾಯನಪುರ ಗಲಾಟೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಗುರುತಿಸಿ ಶಿಕ್ಷಿಸುವ ಕೆಲಸ ಶೀಘ್ರವಾಗಿ ನಡೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ. ತನಿಖೆಗೆ ರಾಜ್ಯ ಸರ್ಕಾರಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.