ಬೆಂಗಳೂರು: ‘ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅಡಿ ಆರೋಗ್ಯ ವೃತ್ತಿಪರರು ಮತ್ತು ಆರೋಗ್ಯ ಸೌಲಭ್ಯ ನೋಂದಣಿಯಲ್ಲಿ ರಾಜ್ಯವು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನದಲ್ಲಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ರಾಜ್ಯದ ಆರೋಗ್ಯ ಕ್ಷೇತ್ರದ ಸಾಧನೆಗಳನ್ನು ಹಂಚಿಕೊಂಡಿರುವ ಅವರು, ‘ಆರೋಗ್ಯ ಆರೈಕೆ ವೃತ್ತಿಪರರ ನೋಂದಣಿ (ಎಚ್.ಪಿ.ಆರ್) ವಲಯದಲ್ಲಿ 28,643 ವೈದ್ಯರು ಮತ್ತು ದಾದಿಯರು ನೋಂದಣಿಯಾಗಿದ್ದಾರೆ. ಈ ಮೂಲಕ ರಾಜ್ಯ ಮೊದಲ ಸ್ಥಾನದಲ್ಲಿದೆ. ಆರೋಗ್ಯ ಸೌಲಭ್ಯ ನೋಂದಣಿಯಲ್ಲಿ (ಎಚ್.ಎಫ್.ಆರ್) ಕರ್ನಾಟಕ 2ನೇ ಸ್ಥಾನದಲ್ಲಿದ್ದು, 27,244 ಸೌಲಭ್ಯಗಳನ್ನು ಕಲ್ಪಿಸಲಾಗಿದೆ’ ಎಂದು ಹೇಳಿದರು.
‘ದೇಶದಲ್ಲಿ 1.35 ಕೋಟಿ ಜನರು ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ (ಎಬಿಎಚ್ಎ) ಹೊಂದಿದ್ದಾರೆ. ರಾಜ್ಯದಲ್ಲಿ4.58 ಲಕ್ಷ ಜನರ ದಾಖಲೆಗಳನ್ನು ಈಗಾಗಲೇ ಎಬಿಎಚ್ಎಗೆ ಲಿಂಕ್ ಮಾಡಲಾಗಿದೆ.ರೋಗಿಗಳು ಸರದಿಯಲ್ಲಿ ನಿಂತು ಕಾಯುವುದನ್ನು ತಪ್ಪಿಸಲು ಇಲ್ಲಿನ ಸರ್.ಸಿ.ವಿ.ರಾಮನ್ ಸಾರ್ವಜನಿಕ ಆಸ್ಪತ್ರೆಯು ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದರು.
‘ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಎಲ್ಲಾ ವೈದ್ಯಕೀಯ ಕಾಲೇಜು, ಜಿಲ್ಲಾ ಆಸ್ಪತ್ರೆಗಳು ಮತ್ತು ಹೆಚ್ಚಿನ ಒತ್ತಡ ಇರುವ ತಾಲ್ಲೂಕು ಆಸ್ಪತ್ರೆಗಳಲ್ಲಿ ಜಾರಿಗೊಳಿಸಲಾಗುವುದು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.