ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕೇಂದ್ರ ಸರ್ಕಾರ ಆಗಸ್ಟ್ 11ರಿಂದ 17ರವರೆಗೆ ಹಮ್ಮಿಕೊಂಡಿರುವ ‘ಹರ್ ಘರ್ ತಿರಂಗಾ’ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಮತ್ತು ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ (ಡಿಸಿಟಿಇ) ವ್ಯಾಪ್ತಿಯಲ್ಲಿ ಯಶಸ್ವಿಗೊಳಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
‘ಈಅಭಿಯಾನದಡಿ ಮನೆ–ಮನೆಗಳಲ್ಲಿ ರಾಷ್ಟ್ರಧ್ಜಜ ಹಾರಿಸಿ, ರಾಷ್ಟ್ರಪ್ರೇಮ ಅಭಿವ್ಯಕ್ತಗೊಳಿಸಲು ಕರೆ ಕೊಡಲಾಗಿದೆ. ಇದಕ್ಕೆ ಪೂರಕವಾಗಿ, ಎಲ್ಲ ವಿಶ್ವವಿದ್ಯಾಲಯಗಳು, ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿ ಕಾಲೇಜುಗಳು ಮತ್ತು ಡಿಪ್ಲೊಮಾ ಕಾಲೇಜುಗಳಲ್ಲೂ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.
ತರಗತಿಗಳ ಸಮಯದಲ್ಲಿ ಈ ಬಗ್ಗೆ ತಿಳಿಸಬೇಕು, ಆಯಾ ಕಾಲೇಜುಗಳ ವಾಹನಗಳ ಮೇಲೆ ಧ್ವಜ ಅಳವಡಿಸಲು ತಿಳಿಸಬೇಕು. ಅಲ್ಲದೆ, ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರತಿ ವಾರದ ಕೊನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್ ಸೈಟ್ನಲ್ಲಿ kanbahvblr@gmail.com ಅಪ್ಲೋಡ್ ಮಾಡಬೇಕು. ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಬೋಧಕರು, ಬೋಧಕೇತರರು, ವಿದ್ಯಾರ್ಥಿಗಳು ಮತ್ತು ಸಂಸ್ಥೆಗಳ ವಾಹನ ಚಾಲಕರನ್ನು ಪ್ರೇರೇಪಿಸಬೇಕು. ಕೇಂದ್ರ ಸರ್ಕಾರದ ಜಾಲತಾಣದಲ್ಲಿ amritmahotsav.nic.in ‘ಹರ್ ಘರ್ ತಿರಂಗಾ’ ಅಡಿಯಲ್ಲಿ ಈ ಕುರಿತು ಇರುವ ಬ್ಯಾನರ್ ಮತ್ತು ಪೋಸ್ಟರ್ಗಳ ಮಾದರಿ ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.