ADVERTISEMENT

ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಆಸ್ಪತ್ರೆಗೆ 5 ವರ್ಷಗಳಲ್ಲಿ ₹4,000 ಕೋಟಿ: ಸಿಎಂ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 8:00 IST
Last Updated 17 ಜನವರಿ 2026, 8:00 IST
   

ಬೆಂಗಳೂರು: ‘ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿರುವ 10 ಎಕರೆ ಜಮೀನಿನಲ್ಲಿ ನಿರ್ಮಾಣವಾಗಲಿರುವ ಸಾವಿರ ಆಸ್ಪತ್ರೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ ₹ 4 ಸಾವಿರ ಕೋಟಿ ವೆಚ್ಚ ಮಾಡಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ನಡುವೆ ಒಡಂಬಡಿಕೆಗೆ ಸಹಿ ಹಾಕಿದ ನಂತರ ಅವರು ಮಾತನಾಡಿದರು.

‘ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ವತಿಯಿಂದ ಸಾವಿರ ಆಸ್ಪತ್ರೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆಗೆ ಸಹಿ ಮಾಡಲಾಗಿದೆ. ಇದಕ್ಕಾಗಿ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಆವರಣದಲ್ಲಿ ಸರ್ಕಾರ 10 ಎಕರೆ ಸ್ಥಳವನ್ನು 99 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಒಪ್ಪಂದವಾಗಿದೆ’ ಎಂದರು.

ADVERTISEMENT

‘ಅಜೀಂ ಪ್ರೇಮ್ ಜಿ ಅವರ ಈ ಮಹತ್ಕಾರ್ಯಕ್ಕೆ ಸರ್ಕಾರ ಆಭಾರಿಯಾಗಿದೆ. ಅದರಲ್ಲಿಯೂ ಉಚಿತವಾಗಿ ಈ ಕಾರ್ಯವನ್ನು ನೆರವೇರಿಸಲು ಮುಂದಾಗಿರುವುದು ಶ್ರೇಷ್ಠ ಕಾರ್ಯ’ ಎಂದು ಬಣ್ಣಿಸಿದರು.

‘ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಕಳೆದ 25 ವರ್ಷಗಳಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ ಸಲ್ಲಿಸುತ್ತಿದೆ. 2021ರಲ್ಲಿ ಶಿಕ್ಷಕರ ತರಬೇತಿಗೆ, 2024ರಲ್ಲಿ ಎಲ್‌ಕೆಜಿಯಿಂದ ಹತ್ತನೇ ತರಗತಿಯವರೆಗೆ ವಾರದಲ್ಲಿ ನಾಲ್ಕು ದಿನ ಮೊಟ್ಟೆ ಕೊಡುವ ಕಾರ್ಯಕ್ರಮಕ್ಕೆ ಒಂದೂವರೆ ಕೋಟಿ ರೂ ನೀಡುವ ಮೂಲಕ ಪ್ರತಿಷ್ಠಾನವು ಕೈಜೋಡಿಸಿದೆ. ಸರ್ಕಾರಿ ಕಾಲೇಜುಗಳಲ್ಲಿ ಓದಿರುವವವರಿಗೆ ವರ್ಷಕ್ಕೆ 30 ಸಾವಿರ ವಿದ್ಯಾರ್ಥಿ ವೇತನವನ್ನು ದೀಪಿಕಾ ವಿದ್ಯಾರ್ಥಿ ವೇತನದಡಿ ನೀಡುತ್ತಿದೆ’ ಎಂದು ಮುಖ್ಯಮಂತ್ರಿ ತಿಳಿಸಿದರು.

‘ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುರಾಗ್ ಬೆಹರ್ ಮಾತನಾಡಿ, ‘ಪ್ರತಿಷ್ಠಾನವು ಸಾರ್ವಜನಿಕ ವ್ಯವಸ್ಥೆಗಳಲ್ಲಿ ನಂಬಿಕೆ ಇಟ್ಟಿರುವ ಸಂಸ್ಥೆಯಾಗಿದೆ. ಸಾರ್ವಜನಿಕ ವ್ಯವಸ್ಥೆಗಳು ಬಲಗೊಳ್ಳಬೇಕು. ಆರೋಗ್ಯ ಆರಂಭವಾಗುವುದು ಆಶಾ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ. ನಮ್ಮ ಜನರು ರೋಗ ಪೀಡಿತರಾಗದಂತೆ ತಡೆಯುವುದು ನಮ್ಮ ಮುಖ್ಯ ಗುರಿ ಆಗಬೇಕು’ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಮಾತನಾಡಿ, ‘ಬೆಂಗಳೂರಿನ ಇನ್ಸ್‌ಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋ ಎಂಟಾಲಜಿ ವತಿಯಿಂದ ಅಜೀಂ ಪ್ರೇಮ್‌ಜಿ ಪ್ರತಿಷ್ಠಾನ ಈ ಆಸ್ಪತ್ರೆಯನ್ನು ನಡೆಸಲಿದೆ. ಈ ಆಸ್ಪತ್ರೆ ನಿರ್ಮಾಣಕ್ಕೆ ಪ್ರತಿಷ್ಠಾನವು ₹1,000 ಕೋಟಿ ಹೂಡಿಕೆ ಮಾಡಲಿದೆ. ಆಸ್ಪತ್ರೆಯ ನಿರ್ವಹಣೆಗೆ ಪ‍್ರತಿಷ್ಠಾನವು ಪ್ರತಿ ವರ್ಷ ₹350 ಕೋಟಿ ವೆಚ್ಚ ಮಾಡಲಿದೆ’ ಎಂದರು.

ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಆರೋಗ್ಯ ವಿಭಾಗದ ಮುಖ್ಯಸ್ಥ ಆನಂದ ಸ್ವಾಮಿನಾಥನ್‌, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಜೀರ್‌ ಅಹ್ಮದ್‌, ಮುಖ್ಯ ಸಚೇತಕ ಅಶೋಕ ಪಟ್ಟಣ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹ್ಮದ್‌ ಮೊಹ್ಸಿನ್‌, ಇನ್ಸ್‌ಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋ ಎಂಟಾಲಜಿ ಸಯನ್ಸ್‌ನ ಡಾ. ಎನ್‌. ಎಸ್‌. ನಾಗೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.