ADVERTISEMENT

ಬಿ.ಸಿ. ಪಾಟೀಲ ರೈತರ ಕ್ಷಮೆ ಕೇಳಲಿ:ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2020, 19:41 IST
Last Updated 3 ಡಿಸೆಂಬರ್ 2020, 19:41 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ‘ಸಾಲ ತೀರಿಸಲಾಗದೇ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರನ್ನು ಹೇಡಿಗಳು ಎಂದು ಕರೆದಿರುವ ಕೃಷಿ ಸಚಿವ ಬಿ.ಸಿ.ಪಾಟೀಲ ಬಹಿರಂಗವಾಗಿ ರಾಜ್ಯದ ರೈತರ ಕ್ಷಮೆ ಯಾಚಿಸಬೇಕು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೃಷಿ ಸಚಿವರ ಹೇಳಿಕೆ ಕುರಿತು ಗುರುವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಹೆಂಡತಿ, ಮಕ್ಕಳು, ನೆಂಟರು, ಊರಿನವರ ಮುಂದೆ ಮರ್ಯಾದೆ ಹೋಯಿತು ಎಂದು ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಹೇಡಿತನದ ಪಟ್ಟ ಕಟ್ಟಿಕೊಳ್ಳಲು ಅಲ್ಲ. ಕೃಷಿ ಸಚಿವರ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನ. ರೈತರ ಕುರಿತು ಕೃಷಿ ಸಚಿವರೇ ನಾಲಿಗೆ ಹರಿಯಬಿಟ್ಟಿರುವುದು ಖಂಡನೀಯ’ ಎಂದು ಟೀಕಿಸಿದ್ದಾರೆ.

ಉದ್ದೇಶ ಸಾಕಾರಗೊಳಿಸಿ: ‘ಗ್ರಾಮ ಪಂಚಾಯಿತಿ ಚುನಾವಣೆಗೆ ಪಕ್ಷ ಸಂಘಟಿಸಲು ‘ಗ್ರಾಮ ಸ್ವರಾಜ್ಯ’ದ ಹೆಸರಿನಲ್ಲಿ ಸಮಾವೇಶ ನಡೆಸುತ್ತಿರುವ ಬಿಜೆಪಿ, ‘ಗ್ರಾಮ ಸ್ವರಾಜ್ಯ’ದ ನೈಜ ಉದ್ದೇಶವನ್ನು ಸಾಕಾರಗೊಳಿಸಬೇಕು. ಗ್ರಾಮೀಣ ಪ್ರದೇಶದ ಜನರನ್ನು ತಲುಪಲು ಈ ಕಾರ್ಯಕ್ರಮವನ್ನು ಬಳಸಿಕೊಳ್ಳಬೇಕು. ಪ್ರವಾಹದಿಂದ ಸಂಕಷ್ಟಕ್ಕೀಡಾದ ಜನರ ಕಷ್ಟ ಆಲಿಸಲು ಈ ಕಾರ್ಯಕ್ರಮದ ಮೂಲಕ ಪ್ರಯತ್ನಿಸಬೇಕು‘ ಎಂದು ಕುಮಾರಸ್ವಾಮಿ ಟ್ವಿಟರ್‌ನಲ್ಲಿ ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.