ಬೆಂಗಳೂರು: ರಾಜ್ಯದಲ್ಲಿ ಪ್ರತಿ ವರ್ಷ ಐದು ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಜಲಾನಯನ ಅಭಿವೃದ್ಧಿ ಮತ್ತು ಸೂಕ್ಷ್ಮ ನೀರಾವರಿ ವ್ಯವಸ್ಥೆ ಅಳವಡಿಕೆಗೆ ಅನುದಾನ ನೀಡುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಅವರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ ಮನವಿ ಸಲ್ಲಿಸಿದ್ದಾರೆ.
ದೆಹಲಿಯ ಕೃಷಿ ಭವನದಲ್ಲಿ ಬುಧವಾರ ಕೈಲಾಶ್ ಚೌಧರಿ ಅವರನ್ನು ಭೇಟಿಮಾಡಿದ ಸಚಿವ ಪಾಟೀಲ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ– ಡಬ್ಲ್ಯುಡಿಸಿ ಯೋಜನೆಯಡಿ ರಾಜ್ಯದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಜಲಾನಯನ ಅಭಿವೃದ್ಧಿಗೆ 53 ಲಕ್ಷ ಹೆಕ್ಟೇರ್ ಕೃಷಿ ಜಮೀನು ಲಭ್ಯವಿದೆ. ಪ್ರತಿ ವರ್ಷ ಐದು ಲಕ್ಷ ಎಕರೆ ಜಮೀನಿನಲ್ಲಿ ಜಲಾನಯನ ಅಭಿವೃದ್ಧಿ ಯೋಜನೆ ಅನುಷ್ಠಾನಕ್ಕೆ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದರು.
ಕರ್ನಾಟಕವು ಜಲಾನಯನ ಅಭಿವೃದ್ಧಿ ಯೋಜನೆಯನ್ನು ವೈಜ್ಞಾನಿಕವಾಗಿ ರೂಪಿಸಿ, ಅನುಷ್ಠಾನಕ್ಕೆ ತರುತ್ತಿದೆ. ರಾಜ್ಯದಲ್ಲಿ ಕೃಷಿ ಅಭಿವೃದ್ಧಿಗೆ ರೈತ ಕಲ್ಯಾಣ ನಿಧಿಯಡಿ ಹೆಚ್ಚಿನ ನೆರವು ನೀಡಬೇಕು ಎಂದು ಬೇಡಿಕೆ ಸಲ್ಲಿಸಿದರು. ರಾಜ್ಯದಲ್ಲಿನ ಕೃಷಿ ಕ್ಷೇತ್ರದ ಪ್ರಸಕ್ತ ಸ್ಥಿತಿಗತಿಗಳ ಕುರಿತು ಕೇಂದ್ರ ಸಚಿವರಿಗೆ ಸಮಗ್ರ ಮಾಹಿತಿಯನ್ನೂ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.