ಚಿಂಚೋಳಿ (ಕಲಬುರ್ಗಿ ಜಿಲ್ಲೆ): ರಾಜ್ಯದ 174ಕ್ಕೂ ಅಧಿಕ ತಾಲ್ಲೂಕುಗಳಲ್ಲಿ ತೀವ್ರ ಬರಗಾಲ ಆವರಿಸಿದೆ. ಜನ ಗುಳೆ ಹೋಗುತ್ತಿದ್ದಾರೆ. ಬರ ಪರಿಹಾರ ಒದಗಿಸಬೇಕಾದ ರಾಜ್ಯ ಸಮ್ಮಿಶ್ರ ಸರ್ಕಾರ ಸತ್ತು ಹೋಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕಿಸಿದರು.
ಪಟ್ಟಣದಲ್ಲಿ ಸೋಮವಾರ ಪಕ್ಷದ ಅಭ್ಯರ್ಥಿ ಡಾ.ಅವಿನಾಶ್ ಜಾಧವ ಪರ ಪ್ರಚಾರ ಕೈಗೊಳ್ಳುವ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ವರ್ಗಾವಣೆ ದಂದೆಯಲ್ಲಿ ಮುಳುಗಿರುವ ಸರ್ಕಾರಕ್ಕೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತೆಯೇ ಇಲ್ಲ. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಮಗೆ ಸಂಬಂಧವಿಲ್ಲದ ಇಲಾಖೆಗಳಲ್ಲಿ ಮೂಗು ತೂರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲೆಯ ಕಾಳಗಿ ತಾಲ್ಲೂಕಿನಲ್ಲಿ ಹೆಚ್ಚಾಗಿರುವ ಕೋಲಿ ಸಮಾಜವನ್ನು ಎಸ್ಟಿಗೆ ಸೇರಿಸುವ ಕಡತ ಕೇಂದ್ರ ಸರ್ಕಾರದ ಬಳಿ ಇದೆ. ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಮನವೊಲಿಸಿ ಈ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.
‘ಚಿಂಚೋಳಿ ಷುಗರ್ಸ್ ಸಕ್ಕರೆ ಕಾರ್ಖಾನೆ’ಯನ್ನು ಪುನಶ್ಚೇತನಗೊಳಿಸುವುದಾಗಿ ತಿಳಿಸಿದರು.
ಕೇಂದ್ರ ಸಚಿವ ರಮೇಶ ಜಿಗಜಿಣಗಿ, ಬೀದರ್ ಭಗವಂತ ಖೂಬಾ, ಮಾಜಿ ಸಚಿವ ಸುನಿಲ್ ವಲ್ಯಾಪುರೆ, ಆಳಂದ ಶಾಸಕ ಸುಭಾಷ್ ಗುತ್ತೇದಾರ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ , ಸುರಪುರ ಶಾಸಕ ನರಸಿಂಹ ನಾಯಕ (ರಾಜೂಗೌಡ), ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.