ಬೆಂಗಳೂರು: ‘ಸರ್ಕಾರಿ ನೌಕರರ ವೇತನಕ್ಕೆ ಸಮನಾದ ವೇತನ ಜಾರಿ ಸೇರಿದಂತೆ ಎಲ್ಲ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಿದ ಬಳಿಕ ತೀರ್ಮಾನಕ್ಕೆ ಬರಲಾಗುವುದು’ ಎಂದು ಸಾರಿಗೆ ಸಂಸ್ಥೆಗಳ ನೌಕರರಿಗೆ ಸಾರಿಗೆ ಸಚಿವ ವಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.
ಮಾರ್ಚ್ 24 ರಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರಕ್ಕಿಳಿಯುವುದಾಗಿ ಸಾರಿಗೆ ಸಂಸ್ಥೆಗಳ ನೌಕರರು ಕರೆ ನೀಡಿದ ಬೆನ್ನಲ್ಲೇ ವಿಕಾಸಸೌಧದಲ್ಲಿ ನೌಕರರ ಸಂಘಟನೆಗಳ ಪ್ರತಿನಿಧಿಗಳ ಜೊತೆ ಬುಧವಾರ ಸಭೆ ನಡೆಸಿದ ಶ್ರೀರಾಮುಲು, ‘ಎರಡು ದಿನಗಳ ಒಳಗೆ ಮುಖ್ಯಮಂತ್ರಿ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗಿ, ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ’ ಎಂದು ನೌಕರರಿಗೆ ಆಶ್ವಾಸನೆ ನೀಡಿದ್ದಾರೆ.
‘ಸಚಿವರ ಸಲಹೆಯಂತೆ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸುತ್ತೇವೆ. ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಇಲ್ಲದೇ ಇದ್ದರೆ, ಮಾರ್ಚ್ 24ರಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದು ಖಚಿತ’ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಆರ್. ಚಂದ್ರಶೇಖರ್ ತಿಳಿಸಿದರು.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದ ನೌಕರರು, ಸಮಾನ ವೇತನದ ಬೇಡಿಕೆ ಈಡೇರಿಸಲು ಮಾ.4 ರ ಸಂಜೆ 5 ಗಂಟೆ ತನಕ ಗಡುವು ನೀಡಿದ್ದರು. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದರಿಂದ ಮಾರ್ಚ್ 24 ರಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ನಿರ್ಧರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.