ADVERTISEMENT

ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಬದ್ಧ: ಬಿ. ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 19:46 IST
Last Updated 16 ಸೆಪ್ಟೆಂಬರ್ 2022, 19:46 IST
ಬಿ. ಶ್ರೀರಾಮುಲು
ಬಿ. ಶ್ರೀರಾಮುಲು   

ಬೆಂಗಳೂರು: ‘ಸಾರಿಗೆ ಸಂಸ್ಥೆಗಳ ನೌಕರರ ವೇತನ ಪರಿಷ್ಕರಣೆಗೆ ಬದ್ಧ. ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು’ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಡಿ.ಎಸ್‌. ಅರುಣ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಾಲ್ಕು ವರ್ಷಗಳಿಂದ ನೌಕರರ ವೇತನ ಪರಿಷ್ಕರಣೆಯಾಗಿಲ್ಲ. ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ನಾಲ್ಕು ಸಾರಿಗೆ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರನ್ನೊಳಗೊಂಡ ಸಮಿತಿಯು ಸಲ್ಲಿಸಿರುವ ವರದಿಯು ಸರ್ಕಾರದ ಪರಿಶೀಲನೆಯಲ್ಲಿದೆ’ ಎಂದು ತಿಳಿಸಿದರು.

‘ಡೀಸೆಲ್‌ ಮತ್ತು ಇತರ ವಸ್ತುಗಳ ಬೆಲೆ ಹೆಚ್ಚಾಗಿದ್ದರೂ ಪ್ರಯಾಣ ದರ ಹೆಚ್ಚಿಸಿಲ್ಲ. ನಾಲ್ಕು ನಿಗಮಗಳಿಗೆ ಪ್ರತಿ ದಿನ ₹15 ಕೋಟಿ ಡೀಸೆಲ್‌ ಖರೀದಿಗೆ ವೆಚ್ಚವಾಗುತ್ತದೆ. ವೇತನ ಪರಿಷ್ಕರಿಸಬೇಕು ಎಂದು ಮುಖ್ಯಮಂತ್ರಿ ಸಹ ಹೇಳಿದ್ದಾರೆ. ಆರ್ಥಿಕ ಇಲಾಖೆ ಜತೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ADVERTISEMENT

‘ಸರ್ಕಾರ ನಾಲ್ಕು ನಿಗಮಗಳಿಗೆ ₹1,200 ಕೋಟಿ ನೆರವು ನೀಡಿದೆ. ಈ ಅನುದಾನವನ್ನು ಇಂಧನ ವೆಚ್ಚ ಮತ್ತು ಭವಿಷ್ಯ ನಿಧಿ ಬಾಕಿ ಪಾವತಿಗಾಗಿ ಒದಗಿಸಲಾಗಿದೆ. ಜತೆಗೆ, 2020–21 ಮತ್ತು 2021–22ನೇ ಸಾಲಿನಲ್ಲಿ ಪಾವತಿಸಬೇಕಾಗಿದ್ದ ಮೋಟಾರು ವಾಹನ ತೆರಿಗೆ ಮೊತ್ತಕ್ಕೆ ವಿನಾಯಿತಿ ನೀಡಲಾಗಿದೆ’ ಎಂದು ತಿಳಿಸಿದರು.

‘ಸಂಸ್ಥೆಗಳ ನಷ್ಟವನ್ನು ಸರಿದೂ ಗಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಬಸ್‌ಗಳ ಕಾರ್ಯಾಚರಣೆ ವೆಚ್ಚವನ್ನು ಕಡಿಮೆ ಮಾಡಲು ಒಬ್ಬರೇ ಸಿಬ್ಬಂದಿ ಕಾರ್ಯನಿರ್ವಹಿಸುವ ವ್ಯವಸ್ಥೆಯನ್ನು ಹೆಚ್ಚಿಸಲಾಗುತ್ತಿದೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.