ಬೆಂಗಳೂರು: ‘ಕೆಲವು ಸಮುದಾಯಗಳು ತಮ್ಮ ಜನಸಂಖ್ಯೆ 50 ಲಕ್ಷದಿಂದ 80 ಲಕ್ಷ ಎಂದು ಹೇಳುತ್ತಿವೆ. ಆದರೆ, ಯಾರ ಬಳಿಯೂ ಅವರವರ ಸಮುದಾಯದ ಜನಸಂಖ್ಯೆಯ ನಿಖರ ಮಾಹಿತಿ ಇಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಎಲ್ಲ ಸಮುದಾಯಗಳ ಜನಸಂಖ್ಯೆಯ ಮಾಹಿತಿಯಿದೆ. ಈ ಸಮೀಕ್ಷೆ ವೈಜ್ಞಾನಿಕವಾಗಿದೆ’ ಎಂದು ಅಭಿಪ್ರಾಯಪಟ್ಟರು.
‘ತಮ್ಮ ಸಮುದಾಯದ ಅಂಕಿ ಅಂಶ ಸರಿಯಾಗಿದೆಯೇ’ ಎಂಬ ಪ್ರಶ್ನೆಗೆ, ‘ಎಲ್ಲ ಸಮುದಾಯಗಳು ನನ್ನದೇ. ನನ್ನ ಸಮುದಾಯ ಎಂದು ಎಲ್ಲಿಯೂ ಹೇಳಿಲ್ಲ’ ಎಂದರು.
‘ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿ ಕುರಿತ ಚರ್ಚೆ ಅಪೂರ್ಣವಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ಮುಂದುವರಿಯಲಿದೆ. ಆದರೆ, ಏಪ್ರಿಲ್ 24 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.