ADVERTISEMENT

ಬಗರ್ ಹುಕುಂ ಸಕ್ರಮಕ್ಕೆ ಮತ್ತೊಂದು ಅವಕಾಶ: ಕಂದಾಯ ಸಚಿವ ಆರ್‌. ಅಶೋಕ

​ಪ್ರಜಾವಾಣಿ ವಾರ್ತೆ
Published 5 ಮೇ 2020, 11:40 IST
Last Updated 5 ಮೇ 2020, 11:40 IST
   

ಬೆಂಗಳೂರು: ‘ಬಗರ್ ಹುಕುಂ ಸಾಗುವಳಿಯನ್ನು ಸಕ್ರಮ ಮಾಡಿಕೊಳ್ಳಲು ರೈತರಿಗೆ ಮತ್ತೊಂದು ಅವಕಾಶ ನೀಡಲಾಗುವುದು’ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಂಗಳವಾರ ಮಾತನಾಡಿದ ಅವರು, ‘ಅಕ್ರಮ ಭೂಮಿಯನ್ನು ಸಕ್ರಮ ಮಾಡಿಕೊಳ್ಳಲು ಭೂ ಸುಧಾರಣಾ ಕಾಯ್ದೆಯಡಿ ಈ ಹಿಂದೆ ಅರ್ಜಿ ಸಲ್ಲಿಸಿದ್ದ ಹಲವು ರೈತರ ಅರ್ಜಿ ತಿರಸ್ಕೃತಗೊಂಡಿವೆ. ಈ ಅರ್ಜಿದಾರರಿಗೆ ಮತ್ತೊಂದು ಅವಕಾಶ ನೀಡಲಾಗುವುದು. ಇದರಿಂದ ಲಕ್ಷಾಂತರ ರೈತರಿಗೆ ಅನುಕೂಲ ಆಗಲಿದೆ’ ಎಂದರು.

‘ಬಗರ್ ಹುಕಂ ಸಾಗುವಳಿ ಮಾಡುತ್ತಿರುವವರಿಗೆ ಫಾರಂ ನಂ 50, 53 ಅರ್ಜಿ ಸಲ್ಲಿಸುವ ಅವಧಿ ಮುಗಿದಿದೆ. ಅವಧಿ ವಿಸ್ತರಣೆಗೆ ರೈತರಿಂದ ಮನವಿ ಬಂದಿದೆ. ಅದನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು.

ADVERTISEMENT

‘ಕಟ್ಟಡ ಕಾಮಗಾರಿಗೆ ಅನುಮತಿ ನೀಡಲಾಗಿದೆ. ಕೆಲವು ಕಡೆ ಕಟ್ಟಡ ಕಾಮಗಾರಿಗೆ ಸಂಬಂಧಿಸಿದ ಸಾಮಗ್ರಿಗಳ ಅಂಗಡಿಗಳ ತೆರವಿಗೆ ಪೊಲೀಸರು ಅನುಮತಿ ನೀಡುತ್ತಿಲ್ಲ ಎಂಬ ದೂರು ಬಂದಿದೆ. ಎಲ್ಲ ಜಿಲ್ಲೆಗಳ ಎಸ್‌ಪಿಗಳಿಗೆ ಕಟ್ಟಡ ಕಾಮಗಾರಿಗೆ ಸಂಬಂಧಿಸಿದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುವಂತೆ ಸೂಚನೆ ನೀಡಲಾಗಿದೆ’ ಎಂದರು.

‘ತಮ್ಮ ರಾಜ್ಯಗಳಿಗೆ ಹೋಗುವುದು ಬೇಡ, ಇಲ್ಲಿಯೇ ಕೆಲಸ ಸಿಗಲಿದೆ ಎಂದು ಭರವಸೆ ನೀಡಿದ್ದರಿಂದ ಬಿಹಾರ ಕಾರ್ಮಿಕರು ತಮ್ಮ ಪ್ರದೇಶಗಳಿಗೆ ಮರಳಿ ಬರಲು ಒಪ್ಪಿದ್ದಾರೆ’ ಎಂದೂ ಅವರು ತಿಳಿಸಿದರು.

‘ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಮೊದಲ ದಿನ ₹ 6 ಲಕ್ಷ ಆದಾಯ ಬಂದಿತ್ತು. ಸೋಮವಾರ ( ಮೇ 4) ₹ 10 ಕೋಟಿ ಆದಾಯ ಬಂದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲ ಕಾಮಗಾರಿ ಆರಂಭಕ್ಕೆ ಮುಖ್ಯಮಂತ್ರಿ ಅನುಮತಿ ನೀಡಿದ್ದಾರೆ’ ಎಂದರು.

‘ವಿದೇಶಗಳಿಂದ ರಾಜ್ಯಕ್ಕೆ ಬರುವ ಕನ್ನಡಿಗರಿಗೆ ಅವರವರ ಜಿಲ್ಲೆಗಳಲ್ಲಿ ಕ್ವಾರಂಟೈನ್ ಮಾಡಲು ಶಾಸಕರು ಮನವಿ ಮಾಡಿದ್ದಾರೆ. ಅದೇ ರೀತಿ ಕ್ವಾರಂಟೈನ್ ಮಾಡಲಾಗುವುದು’ ಎಂದೂ ಅಶೋಕ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.