ಬೆಂಗಳೂರು: ಬಗರ್ಹುಕುಂ ಯೋಜನೆಯಡಿ ನಮೂನೆ 57ರ ಅಡಿಯಲ್ಲಿ 2019ರ ಮಾರ್ಚ್ 16ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅರ್ಜಿದಾರರು ₹100 ಶುಲ್ಕ ಸಹಿತ ತಹಶೀಲ್ದಾರ್ಗೆ ಅರ್ಜಿ ಸಲ್ಲಿಸಬೇಕು. ಅದನ್ನು ತಹಶೀಲ್ದಾರ್ ನಮೂನೆ 58 ರಿಜಿಸ್ಟರ್ನಲ್ಲಿ ನಮೂದಿಸಬೇಕು. ನಮೂನೆ 50 ಹಾಗೂ 53ರ ಪ್ರಕ್ರಿಯೆ ವೇಳೆ ದುರುಪಯೋಗ ನಡೆದಿದೆ ಎಂದು ಆರೋಪ ವ್ಯಕ್ತವಾಗಿತ್ತು. ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ತಂತ್ರಾಂಶ ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದರು.
ನೇಮಕ ಅಧಿಕಾರ: ರಾಜ್ಯದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳನ್ನು ಜಿಲ್ಲಾಧಿಕಾರಿಗಳೇ ನೇರ ನೇಮಕ ಮಾಡಲು ಅವಕಾಶ ಇದೆ. ಆದರೆ, ದ್ವಿತೀಯ ದರ್ಜೆ ಸಹಾಯಕರನ್ನು ಹೀಗೆ ನೇಮಿಸಿಕೊಳ್ಳುವ ಅಧಿಕಾರ ಜಿಲ್ಲಾಧಿಕಾರಿಗಳಿಗಿಲ್ಲ. ಎಸ್ಡಿಎ ನೇಮಕಾತಿಗೂ ಅವರನ್ನೇ ನೇಮಕ ಪ್ರಾಧಿಕಾರಿಗಳನ್ನಾಗಿ ಪರಿಗಣಿಸಲು ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.
‘ಈ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗ, ಕಾನೂನು ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆ, ಸಂಸದೀಯ ವ್ಯವಹಾರಗಳ ಇಲಾಖೆಗೆ ಪತ್ರ ಬರೆಯಲಾಗಿದೆ. ವೃಂದ ಹಾಗೂ ನೇಮಕಾತಿ ನಿಯಮಗಳಿಗೆ ಸೂಕ್ತ ತಿದ್ದುಪಡಿ ತರಲಾಗುತ್ತದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.