ಕಳಸಾ–ಬಂಡೂರಿ ಯೋಜನೆಯ ಕಾಮಗಾರಿ ನಡೆದಿರುವ ದೃಶ್ಯ
(ಸಂಗ್ರಹ ಚಿತ್ರ)
ನವದೆಹಲಿ: ಮಹದಾಯಿ ಯೋಜನೆಯ ಭಾಗವಾದ ಬಂಡೂರಿ ನಾಲೆ ತಿರುವು ಯೋಜನೆಗೆ 71 ಎಕರೆ ಅರಣ್ಯ ಭೂಮಿ ಬಳಸಲು ಅನುಮೋದನೆ ನೀಡುವಂತೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ ಪ್ರಸ್ತಾವವನ್ನು ಕೇಂದ್ರ ಪರಿಸರ, ಅರಣ್ಯ ಹಾಗೂ ತಾಪಮಾನ ಬದಲಾವಣೆ ಸಚಿವಾಲಯದ ತಜ್ಞರ ತಂಡವು ಈ ವಾರ ನಡೆಯಲಿರುವ ಸಭೆಯಲ್ಲಿ ಪರಿಶೀಲನೆ ನಡೆಸಲಿದೆ.
ಮಹದಾಯಿ ಜಲವಿವಾದ ನ್ಯಾಯಮಂಡಳಿಯು 2018ರ ಆಗಸ್ಟ್ 14ರಂದು ಕಳಸಾ–ಬಂಡೂರಿ ಯೋಜನೆಗೆ 3.90 ಟಿಎಂಸಿ ಅಡಿ ನೀರಿನ ಹಂಚಿಕೆ ಮಾಡಿದೆ. ಇದರಲ್ಲಿ ಬಂಡೂರಿ ನಾಲಾ ತಿರುವು ಯೋಜನೆಗೆ 2.18 ಟಿಎಂಸಿ ಅಡಿ ಮೀಸಲಿಡಲಾಗಿದೆ. ಈ ಯೋಜನೆಗೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಮೂರು ಗ್ರಾಮಗಳ ಅರಣ್ಯ ಬಳಕೆಗೆ (ಜಾಕ್ವೆಲ್ ನಿರ್ಮಾಣ, ಪಂಪ್ ಹೌಸ್, ಎಲೆಕ್ಟ್ರಿಕಲ್ ಸಬ್ ಸ್ಟೇಷನ್, ಪೈಪ್ಲೈನ್ಗೆ) ಒಪ್ಪಿಗೆ ನೀಡಬೇಕು ಎಂದು ಕರ್ನಾಟಕ ಸರ್ಕಾರವು ಕೇಂದ್ರ ಪರಿಸರ ಸಚಿವಾಲಯಕ್ಕೆ ಪ್ರಸ್ತಾವ ಸಲ್ಲಿಸಿತ್ತು. ‘ಪ್ರಸ್ತಾವಿತ ಬಂಡೂರಿ ನಾಲಾ ತಿರುವು ಯೋಜನೆಯ 10 ಕಿ.ಮೀ. ವ್ಯಾಪ್ತಿಯಲ್ಲಿ ವನ್ಯಜೀವಿಧಾಮ ಹಾಗೂ ಸಂರಕ್ಷಿತ ಪ್ರದೇಶ ಇಲ್ಲ ಎಂದು ಕರ್ನಾಟಕ ಸರ್ಕಾರ ಪ್ರತಿಪಾದಿಸಿದೆ. ಆದರೆ, ಭೀಮಗಢ ವನ್ಯಜೀವಿಧಾಮದಿಂದ ನಾಲಾ ತಿರುವು ಪ್ರದೇಶ 1.44 ಕಿ.ಮೀ. ದೂರದಲ್ಲಿದೆ’ ಎಂದು ಕೇಂದ್ರ ಅರಣ್ಯ ಸಚಿವಾಲಯ ಆಕ್ಷೇಪ ಎತ್ತಿತ್ತು. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಕ್ಕೆ ಸೂಚಿಸಿತ್ತು.
ಬಂಡೂರಿ ನಾಲಾ ತಿರುವು ಯೋಜನಾ ಸ್ಥಳಕ್ಕೆ ಬೆಳಗಾವಿ ವೃತ್ತದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು 2024ರ ಫೆಬ್ರುವರಿಯಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರು. ‘ಈ ಪ್ರದೇಶದ ಸುತ್ತ ಹುಲಿ, ಚಿರತೆ, ಕರಡಿ, ಕಾಡುಕೋಣ, ಜಿಂಕೆ ಸೇರಿದಂತೆ ಅನೇಕ ಕಾಡು ಪ್ರಾಣಿಗಳು ಕಂಡುಬಂದಿವೆ. ಈ ಪ್ರದೇಶವು ರಾಷ್ಟ್ರೀಯ ಉದ್ಯಾನ, ವನ್ಯಜೀವಿಧಾಮ, ಹುಲಿ ಸಂರಕ್ಷಿತ ಪ್ರದೇಶ ಹಾಗೂ ಆನೆ ಕಾರಿಡಾರ್ನ ಭಾಗ ಅಲ್ಲ’ ಎಂದು ವರದಿಯಲ್ಲಿ ಉಲ್ಲೇಖಿಸಿದ್ದರು.
‘ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಅಧಿಸೂಚಿಸಿದ ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೂ ಈ ಪ್ರದೇಶ ಬರುವುದಿಲ್ಲ. ಈ ಯೋಜನೆಯ ಅನುಷ್ಠಾನದಿಂದ ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಉಲ್ಲಂಘನೆ ಆಗುವುದಿಲ್ಲ. ಕುಡಿಯುವ ನೀರು ಒದಗಿಸುವ ಉದ್ದೇಶದ ಈ ಯೋಜನೆಗಾಗಿ ಕನಿಷ್ಠ ಪ್ರಮಾಣದ ಅರಣ್ಯ ಬಳಕೆ ಮಾಡಲಾಗುತ್ತದೆ’ ಎಂದು ರಾಜ್ಯ ಸರ್ಕಾರವು ಪರಿಸರ ಸಚಿವಾಲಯಕ್ಕೆ ಪ್ರತಿಕ್ರಿಯೆ ನೀಡಿತ್ತು.
ಈ ಯೋಜನಾ ಪ್ರದೇಶವು ಪರಿಸರ ಸೂಕ್ಷ್ಮ ವಲಯದ ಭಾಗವಲ್ಲ ಎಂದು ಅಧಿಕಾರಿಗಳು ವಾದಿಸಿದ್ದರು. ಆದರೆ, ಯೋಜನೆಗೆ ಅರಣ್ಯ ಬಳಸುವ ನೆರಸೆಯು ಪರಿಸರ ಸೂಕ್ಷ್ಮ ಪ್ರದೇಶದ ಕರಡು ಅಧಿಸೂಚನೆಯ ಭಾಗವಾಗಿದೆ ಎಂದು ಪರಿಸರ ಸಚಿವಾಲಯದ ಪ್ರಾದೇಶಿಕ ಕಚೇರಿ ಗಮನಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.