ADVERTISEMENT

ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಆದ್ಯತೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 11:04 IST
Last Updated 12 ಆಗಸ್ಟ್ 2020, 11:04 IST
ಗೃಹ ಸಚಿವ ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ   

ಉಡುಪಿ: ಡಿಜಿ ಹಳ್ಳಿ ಹಾಗೂ ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆಯನ್ನು ಹತೋಟಿಗೆ ತರಲು ಕೊನೆಯ ಅಸ್ತ್ರವಾಗಿ ಗೋಲಿಬಾರ್ ಮಾಡಬೇಕಾಯಿತು. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಉಡುಪಿಯಲ್ಲಿ ಬುಧವಾರ ಮಾತನಾಡಿದ ಸಚಿವರು ‘ಗಲಭೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಪೊಲೀಸರಿಗೂ ಗಾಯಗಳಾಗಿವೆ. ಗಲಭೆಯಲ್ಲಿ ಭಾಗಿಯಾದ 110 ಜನರನ್ನು ಬಂಧಿಸಿದ್ದು, ಮತ್ತಷ್ಟು ಜನರನ್ನು ಬಂಧಿಸಲಿದ್ದೇವೆ ಎಂದರು.

ಹೈದರಾಬಾದ್ ಹಾಗೂ ಚೆನ್ನೈನಿಂದ 6 ಸಿಆರ್‌ಪಿಎಫ್ ತುಕಡಿಗಳನ್ನು ಬೆಂಗಳೂರಿಗೆ ಕರೆಸಲಾಗಿದೆ. ರ‍್ಯಾಪಿಡ್‌ ಆ್ಯಕ್ಷನ್ ಫೋರ್ಸ್‌, ಗರುಡ ಪಡೆಗಳನ್ನು ಕೂಡ ನಿಯೋಜಿಸಲಾಗಿದೆ. ಗಲಭೆಯ ಹಿಂದೆ ಯಾರಿದ್ದಾರೆ ಎಂಬ ಕೂಲಂಕಷ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ADVERTISEMENT

ಡಿಜಿ ಹಳ್ಳಿ ಪೊಲೀಸ್ ಸ್ಟೇಷನ್‌ ಬಳಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಗಲಭೆಯ ದೃಶ್ಯಗಳು ಸೆರೆಯಾಗಿದ್ದು, ಆರೋಪಿಗಳ ಮಾಹಿತಿ ಕಲೆ ಹಾಕಲಾಗುತ್ತಿದೆ. ಫೇಸ್ ಬುಕ್‌ನಲ್ಲಿ ಗಲಭೆಗೆ ಕರೆಕೊಟ್ಟು ದಾಳಿ ನಡೆಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುವ ಷಡ್ಯಂತ್ರ ಇದಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ಬೆಂಗಳೂರು ತಲುಪಿದ ತಕ್ಷಣ ಹಿರಿಯ ಅಧಿಕಾರಿಗಳ ಜತೆ ಸಭೆ ನಡಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.