
ಡಿಕೆಶಿ
ಬೆಂಗಳೂರು: ‘ನಗರದ ಸಂಚಾರ ದಟ್ಟಣೆ ನಿಯಂತ್ರಿಸಬೇಕು ಎಂಬ ಕಾರಣಕ್ಕೆ ಐದು ವರ್ಷಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ₹ 2.50 ಲಕ್ಷ ಕೋಟಿ ವೆಚ್ಚ ಮಾಡಲಾಗುತ್ತಿದೆ’ ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಬೆಂಗಳೂರು ಬಿಸಿನೆಸ್ ಕಾರಿಡಾರ್ ನಿರ್ಮಿಸಲಾಗುತ್ತಿದೆ. ಜೊತೆಗೆ, ಟನಲ್ ರಸ್ತೆಗಳು, 123 ಕಿ.ಮೀ ಎಲಿವೇಟೆಡ್ ಕಾರಿಡಾರ್ಗಳು, 300 ಕಿ.ಮೀ ಉದ್ದದ ಬಫರ್ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ’ ಎಂದರು.
‘ಬಫರ್ ರಸ್ತೆ ಬಗ್ಗೆ ಘೋಷಣೆ ಮಾಡಿದಾಗ ಅನೇಕರು ನಕ್ಕಿದ್ದರು. ಟೀಕೆ ಕೂಡಾ ಮಾಡಿದರು. ಈಜಿಪುರದ ಬಳಿ ಕೆಲಸ ನಡೆಯುತ್ತಿದೆ. ಅಲ್ಲಿ ಹೇಗಿದೆ ಎಂದು ನೀವೇ (ಮಾಧ್ಯಮಗಳು) ನೋಡಿ. ಈ ಯೋಜನೆಗೆ ಮಿಲಿಟರಿಯವರು ಜಾಗ ಬಿಟ್ಟುಕೊಟ್ಟಿದ್ದಾರೆ. ಈ ರಸ್ತೆಯಿಂದ ಆಗುತ್ತಿರುವ ಬದಲಾವಣೆ ನೋಡಿ ನಿಮಗೇ ಅರ್ಥವಾಗುತ್ತದೆ’ ಎಂದರು.
ಟನಲ್ ರಸ್ತೆ ವಿಚಾರವಾಗಿ ಬಿಜೆಪಿ ಶಾಸಕರು, ಸಂಸದರು ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, ‘ಅವರ ಎಲ್ಲ ಟೀಕೆಗಳಿಗೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರೇ ಉತ್ತರ ನೀಡಿದ್ದಾರೆ. ಹೀಗಾಗಿ, ನಾನು ಅವರಿಗೆ ಉತ್ತರ ನೀಡುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.