ಬೆಂಗಳೂರು: ‘ಕಳೆದ ರಾತ್ರಿ ಕಾವಲ್ಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು, ‘ಹಿಂದೂ– ಮುಸ್ಲಿಂ ಎರಡೂ ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ’ ಎಂದಿದ್ದಾರೆ.
‘ಗಲಭೆಗೆ ಪ್ರಚೋಧಿಸಿದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್ಗೆ ತಿಳಿಸಿದ್ದೇನೆ. ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ’
‘ಇಂತಹ ಕೋಮು ಗಲಭೆಗಳಲ್ಲಿ ಸಾವು– ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ’
‘ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿ ಖಂಡನೀಯ. ಇದರಿಂದ ಪೊಲೀಸರು ನೈತಿಕ ಸ್ಥೈರ್ಯ ಕಳೆದುಕೊಳ್ಳಬಾರದು. ಇಂಥ ಪ್ರಕರಣಗಳ ಸಂದರ್ಭಗಳಲ್ಲಿ ಪೊಲೀಸರು ತಕ್ಷಣ ವಿವೇಚನೆಯಿಂದ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಣ್ಣ ನಿರ್ಲಕ್ಷ್ಯ ಅನಾಹುತಕ್ಕೆ ದಾರಿ ಮಾಡಿಕೊಡುತ್ತದೆ’ ಎಂದೂ ಅವರು ಹೇಳಿದ್ದಾರೆ.
ಸಿದ್ದರಾಮಯ್ಯ ಸರಣಿ ಟ್ವೀಟ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.