ADVERTISEMENT

ಬೆಂಗಳೂರು ಗ್ರಾಮಾಂತರ–ರಾಮನಗರ ಕ್ಷೇತ್ರ: ರವಿ, ರಮೇಶ್‌ಗೌಡ ನಾಮಪತ್ರ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2021, 19:26 IST
Last Updated 19 ನವೆಂಬರ್ 2021, 19:26 IST
ಎಸ್‌.ರವಿ 
ಎಸ್‌.ರವಿ    

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ):ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಪುನರಾಯ್ಕೆ ಬಯಸಿ ಕಾಂಗ್ರೆಸ್ ಅಭ್ಯರ್ಥಿ ಎಸ್.ರವಿ ಹಾಗೂ ಜೆಡಿಎಸ್ ಅಭ್ಯರ್ಥಿ ರಮೇಶ್ ಗೌಡ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಬೆಂಬಲಿಗರೊಂದಿಗೆಜಿಲ್ಲಾಡಳಿತ ಭವನಕ್ಕೆ ಬಂದ ಅಭ್ಯರ್ಥಿಗಳು ಹೆಚ್ಚುವರಿ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಮಾಜಿ ಸಂಸದ ಎಂ.ವೀರಪ್ಪ ಮೊಯಿಲಿ ಮತ್ತು ಮಾಜಿ ಶಾಸಕ ಎಚ್‌.ಸಿ. ಬಾಲಕೃಷ್ಣ ಅವರು ಕಾಂಗ್ರೆಸ್‌ ಅಭ್ಯರ್ಥಿಗೆ ಸಾಥ್‌ ನೀಡಿದರು.

ಜೆಡಿಎಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ರಮೇಶ್‌ ಗೌಡ ಅವರಿಗೆ ಪಕ್ಷ ಇನ್ನೂ ‘ಬಿ’ ಫಾರಂ ನೀಡಿಲ್ಲ. ಮಂಗಳವಾರ ಜೆಡಿಎಸ್‌ಅಭ್ಯರ್ಥಿಗಳನ್ನು ಘೋಷಿಸುವುದಾಗಿ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. ಹಾಗಾಗಿ ಮಂಗಳವಾರ ಅವರು ‘ಬಿ’ ಫಾರಂ ಸಲ್ಲಿಸುವ ಸಾಧ್ಯತೆ ಇದೆ.

ADVERTISEMENT

ಸಂಸದ ಡಿ.ಕೆ.ಸುರೇಶ್ ಅವರು ಜಿಲ್ಲಾಧಿಕಾರಿ ಕಚೇರಿಯ ಬಳಿ ಬಂದಿದ್ದರು. ಆದರೆ, ಅಭ್ಯರ್ಥಿ ನಾಮಪತ್ರ ಸಲ್ಲಿಸುವಾಗ ಒಳಗೆ ಹೋಗಲಿಲ್ಲ. ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ, ದೇವನಹಳ್ಳಿಯ ಮಾಜಿ ಶಾಸಕರಾದ ಮುನಿನರಸಿಂಹಯ್ಯ, ಕೆ.ವೆಂಕಟಸ್ವಾಮಿ ಅವರು ಅಭ್ಯರ್ಥಿಯೊಂದಿಗೆ ಒಳಗೆ ಹೋಗಲು ಪ್ರಯತ್ನಿಸಿದರು.ಇಬ್ಬರಿಗೆ ಮಾತ್ರ ಅವಕಾಶವಿದ್ದ ಕಾರಣ ಅವರು ಹೊರಗಡೆ ನಿಲ್ಲಬೇಕಾಯಿತು.

ಜೆಡಿಎಸ್ ಅಭ್ಯರ್ಥಿ ರಮೇಶ್ ಗೌಡ ನಾಮಪತ್ರ ಸಲ್ಲಿಸುವಾಗ ಪಕ್ಷದ ರಾಜ್ಯ ನಾಯಕರಅನುಪಸ್ಥಿತಿ ಎದ್ದು ಕಾಣುತ್ತಿತ್ತು. ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಬಮೂಲ್ ನಿರ್ದೇಶಕ ಬಿ.ಶ್ರೀನಿವಾಸ್ ಕೂಡ ಕಾಣಿಸಿಕೊಳ್ಳಲಿಲ್ಲ.ದೇವನಹಳ್ಳಿ ತಾಲ್ಲೂಕು ಜೆಡಿಎಸ್‌ ಅಧ್ಯಕ್ಷ ಆರ್.ಮುನೇಗೌಡ ಹಾಗೂ ಚನ್ನರಾಯಪಟ್ಟಣ ಹೋಬಳಿ ಜೆಡಿಎಸ್ ಘಟಕದ ಅಧ್ಯಕ್ಷ ಮುನಿರಾಜು ಮಾತ್ರ ಜತೆಗಿದ್ದರು.

***

ಎರಡು ಬಾರಿ ವಿಧಾನ ಪರಿಷತ್ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ಮತ್ತೊಮ್ಮೆ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಈ ಬಾರಿಯೂ ಗೆಲುವು ಖಚಿತ ಎನ್ನುವ ವಿಶ್ವಾಸವಿದೆ

–ಎಸ್.ರವಿ,ಕಾಂಗ್ರೆಸ್ ಅಭ್ಯರ್ಥಿ

***

ವಿಧಾನ ಪರಿಷತ್‌ ಕ್ಷೇತ್ರದ ವ್ಯಾಪ್ತಿಯ ಎಂಟು ತಾಲ್ಲೂಕುಗಳಲ್ಲಿ ಐವರು ಜೆಡಿಎಸ್‌ ಶಾಸಕರಿದ್ದಾರೆ. ಆದ್ದರಿಂದ ನಮಗೆ ಹೆಚ್ಚಿನ ಬಲ ಬಂದಿದೆ.

– ರಮೇಶ್ ಗೌಡ,ಜೆಡಿಎಸ್ ಅಭ್ಯರ್ಥಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.