ಬೆಂಗಳೂರು: ನಗರದ ಕೊಳದಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಾಂತವೀರ ಸ್ವಾಮೀಜಿ ಶನಿವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಠದ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.
ಅಖಿಲ ಕರ್ನಾಟಕ ಬೇಡ ಜಂಗಮ ಸಂಸ್ಥೆಯ ಅಧ್ಯಕ್ಷರು, ಅಖಿಲ ಭಾರತ ಸಂಸ್ಕೃತ ವಿದ್ಯಾಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾಗಿದ್ದ ಶ್ರೀಗಳು ಕೊಳದ ಮಠದ ಮಹಾಸಂಸ್ಥಾನದ ಮೂಲಕ ವಿವಿಧ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳುತ್ತಿದ್ದರು. ಮಠಾಧೀಶರು, ಗಣ್ಯರು ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಧರ್ಮ ಜಾಗೃತಿಯಲ್ಲಿ ನಿರತರಾಗಿದ್ದ ಶ್ರೀಗಳು:‘ಶಾಂತವೀರ ಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖಿತನಾಗಿದ್ದೇನೆ. ಧರ್ಮ ಜಾಗೃತಿ, ಸಮಾಜ ಸಧಾರಣೆಯಲ್ಲಿ ನಿರತರಾಗಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
‘ಶಾಂತವೀರ ಸ್ವಾಮೀಜಿಗಳು ಶಿವೈಕ್ಯರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಧರ್ಮಪ್ರಸಾರ, ಸಾಮಾಜಿಕ ಕಾಳಜಿ, ಜನಜಾಗೃತಿಗಳಲ್ಲಿ ನಿರತರಾಗಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜ ಹಿರಿಯ ಗುರುಗಳನ್ನು ಕಳೆದುಕೊಂಡಿದೆ’ ಎಂದು ಶಾಸಕ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.