ಹೊನ್ನಾಳಿ: ಬೆಂಗಳೂರಿನ ‘ನಟರಾಜ್ ಎಂಟರ್ಟೇನರ್’ ತಂಡದ ಗಿರೀಶ್ (32) ಶನಿವಾರ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕತ್ತಿಗೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಮುನ್ನಾ ದಿನವಾದ ಶುಕ್ರವಾರ ನೃತ್ಯ ಕಾರ್ಯಕ್ರಮ ನಡೆಸಿಕೊಡುವ ಸಲುವಾಗಿ ಗಿರೀಶ್ ಅವರು ಶುಕ್ರವಾರ ಬಂದಿದ್ದರು. ರಾತ್ರಿ ಕಾರ್ಯಕ್ರಮ ಮುಗಿಸಿದ ನಂತರ ಹೊನ್ನಾಳಿಯಲ್ಲಿರುವ ಪ್ರವಾಸಿ ಮಂದಿರದಲ್ಲಿ ತಂಗಿದ್ದರು. ಶನಿವಾರ ಮಧ್ಯಾಹ್ನ 6 ಜನರು ನದಿಗೆ ಸ್ನಾನಕ್ಕಾಗಿ ತೆರಳಿದ್ದರು. ಈ ವೇಳೆ ಗಿರೀಶ್ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇವರ ಜತೆಗಿದ್ದ ಅರುಣ್ (21) ಅವರನ್ನು ರಕ್ಷಿಸಲಾಗಿದೆ.
ನ್ಯಾಮತಿ ತಾಲ್ಲೂಕಿನ ಫಲವನಹಳ್ಳಿಯಲ್ಲಿ ಶನಿವಾರ ಗ್ರಾಮ ವಾಸ್ತವ್ಯದ ನಿಮಿತ್ತ ನೃತ್ಯ, ರಸಮಂಜರಿ ಕಾರ್ಯಕ್ರಮ ನಡೆಸಿಕೊಡಬೇಕಿತ್ತು. ಗಿರೀಶ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗಿದೆ. ಪೋಷಕರು ಬಂದ ಬಳಿಕ ದೂರು ದಾಖಲಿಸಿಕೊಂಡು ಶವವನ್ನು ವಶಕ್ಕೆ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.