ADVERTISEMENT

ಬಿಸಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 23 ಜುಲೈ 2025, 0:00 IST
Last Updated 23 ಜುಲೈ 2025, 0:00 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಕರ್ನಾಟಕ ರಾಜ್ಯ ವಕೀಲರ ಪರಿಷತ್‌ನ (ಕೆಎಸ್‌ಬಿಸಿ) ಆಡಳಿತ ಮಂಡಳಿಯ ನಿಗದಿತ ಐದು ವರ್ಷಗಳ ಅವಧಿ 2023ರ ಜೂನ್‌ನಲ್ಲೇ ಪೂರ್ಣಗೊಂಡಿದ್ದು, ಹಾಲಿ ಆಡಳಿತ ಮಂಡಳಿಯನ್ನು ಪದಚ್ಯುತಗೊಳಿಸಿ ಹೊಸದಾಗಿ ಚುನಾವಣೆ ನಡೆಸುವ ಬಗ್ಗೆ ಪ್ರತಿಕ್ರಿಯೆ ನೀಡಿ’ ಎಂದು ಭಾರತೀಯ ವಕೀಲರ ಪರಿಷತ್‌ಗೆ (ಬಿಸಿಐ) ಹೈಕೋರ್ಟ್‌ ನಿರ್ದೇಶಿಸಿದೆ.

ಈ ಸಂಬಂಧ ಹೈಕೋರ್ಟ್‌ ವಕೀಲ ರಹಮತ್‌ ಉಲ್ಲಾ ಕೊತ್ವಾಲ್‌ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

‘ವಕೀಲರ ಕಾಯ್ದೆ–1961ರ ಕಲಂ 8ರ ಅನ್ವಯ ಪರಿಷತ್‌ನ ಅವಧಿ ಮುಗಿಯುವ ಮುನ್ನವೇ ರಾಜ್ಯ ವಕೀಲರ ಪರಿಷತ್‌ಗೆ ಚುನಾವಣೆ ನಡೆಸದೇ ಹೋದರೆ, ಬಿಸಿಐ ವಿಶೇಷ ಸಮಿತಿ ರಚಿಸಿ ಅದಕ್ಕೆ ಅಧಿಕಾರ ನೀಡಬೇಕು ಮತ್ತು ಆದಷ್ಟು ಶೀಘ್ರ ಪರಿಷತ್‌ಗೆ ಚುನಾವಣೆ ನಡೆಸಬೇಕಾಗುತ್ತದೆ’ ಎಂದು ನ್ಯಾಯಪೀಠ ಹೇಳಿದೆ.

ADVERTISEMENT

‘ಕಲಂ 8ರ ಅನ್ವಯ ಕೆಎಸ್‌ಬಿಸಿಗೆ ಹೊಸದಾಗಿ ಚುನಾವಣೆ ನಡೆಸುವ ಸಂಬಂಧ ಬಿಸಿಐ ತನ್ನ ನಿಲುವು ತಿಳಿಸಬೇಕು’ ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 31ಕ್ಕೆ ಮುಂದೂಡಿದೆ. ಕೆಎಸ್‌ಬಿಸಿ ಪರ ಹೈಕೋರ್ಟ್‌ ವಕೀಲ ಟಿ.ಪಿ.ವಿವೇಕಾನಂದ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.