ADVERTISEMENT

ಸಾವರ್ಕರ್ ಬಗ್ಗೆ ಕಾಂಗ್ರೆಸ್‌ ಕ್ಷಮೆ ಕೇಳಿದರೆ ನಾನೂ ಕ್ಷಮೆ ಕೇಳುವೆ: ಯತ್ನಾಳ್

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 14:39 IST
Last Updated 27 ಫೆಬ್ರುವರಿ 2020, 14:39 IST
ಬಸನಗೌಡ ಪಾಟೀಲ ಯತ್ನಾಳ್
ಬಸನಗೌಡ ಪಾಟೀಲ ಯತ್ನಾಳ್   

ಶಿವಮೊಗ್ಗ: ಎಚ್.ಎಸ್. ದೊರೆಸ್ವಾಮಿ ಅವರನ್ನು ‘ನಕಲಿ ಸ್ವಾತಂತ್ರ್ಯ ಹೋರಾಟಗಾರ’ ಎಂದು ಟೀಕಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಮ್ಮ ಹೇಳಿಕೆಗೆ ಬದ್ಧರಾಗಿದ್ದು, ವೀರ ಸಾವರ್ಕರ್ ವಿರುದ್ಧ ಹೇಳಿಕೆ ನೀಡಿರುವ ಕಾಂಗ್ರೆಸ್ ಕ್ಷಮೆ ಕೇಳಿದರೆ ಮಾತ್ರ ತಾವೂ ಕ್ಷಮೆ ಕೇಳುವುದಾಗಿ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಾಂಗ್ರೆಸ್‌ನವರು ಮೊದಲು ಕ್ಷಮೆಯಾಚಿಸಬೇಕು. ಆ ನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ’ ಎಂದು ಹೇಳಿದರು.

‘ದೊರೆಸ್ವಾಮಿ ಅವರು ಕಾಂಗ್ರೆಸ್ ಮುಖವಾಣಿಯಂತೆ ಹೇಳಿಕೆ ನೀಡುತ್ತಿದ್ದಾರೆ.ಪ್ರಧಾನಿ ಮೋದಿ ಅವರನ್ನು ಸೋಲಿಸಿ ಎಂದು ಕರೆ ನೀಡಿದ್ದರು. ಪೌರತ್ವ (ತಿದ್ದುಪಡಿ) ಕಾಯ್ದೆಗೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ’ ಎಂದು ದೂರಿದರು.

ADVERTISEMENT

‘ಸಂವಿಧಾನದ ಪ್ರಕಾರ ಲೋಕಸಭೆ, ರಾಜ್ಯಸಭೆಯಲ್ಲಿ ಅನುಮೋದನೆ ಪಡೆದ ಸಿಎಎಯನ್ನು ವಿರೋಧಿಸುತ್ತಿದ್ದಾರೆ. ಸಿಎಎ ವಿರುದ್ಧ ಪ್ರತಿಭಟಿಸುವವರಿಗೆ ಬೆಂಬಲ ನೀಡುತ್ತದೆ ಎಂದರೆ ಕಾಂಗ್ರೆಸ್ ಕೂಡಾ ಸಂವಿಧಾನ ವಿರೋಧಿಯಾಗಿದೆ. ಸಿದ್ದರಾಮಯ್ಯ, ರಮೇಶ್ ಕುಮಾರ್, ಈಶ್ವರ ಖಂಡ್ರೆ ನನ್ನ ಬಗ್ಗೆ ಮಾತನಾಡಿದ್ದು, ಅವರಿಗಿಂತಲೂ ಕೆಟ್ಟ ಶಬ್ದ ಬಳಸಲು ನನಗೂ ಬರುತ್ತದೆ’ ಎಂದು ಹರಿಹಾಯ್ದರು.

‘ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ್ದ ವೇಳೆ ದೇಶದಲ್ಲಿ ಅಭದ್ರತೆ, ಅಶಾಂತಿ ಇದೆ ಎಂಬುದನ್ನು ಬಿಂಬಿಸಲು ಹಿಂಸಾಚಾರ ನಡೆಸಲಾಗಿದೆ. ಕಾಂಗ್ರೆಸ್, ಪಾಕಿಸ್ತಾನದ ಕುಮ್ಮಕ್ಕಿನಿಂದ ಇದು ನಡೆದಿದೆ’ ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.