ಬೆಂಗಳೂರು: ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ಆಯೋಜಿಸಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭವು ಅ.5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
ಅಭಿಯಾನ ಮತ್ತು ಸಮಾರೋಪದ ರೂಪುರೇಷೆ ಕುರಿತು ಒಕ್ಕೂಟದ ಹಲವು ಸ್ವಾಮೀಜಿಗಳು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರನ್ನು ಬುಧವಾರ ಭೇಟಿಯಾಗಿ ಸಮಾಲೋಚನೆ ನಡೆಸಿದರು.
ಬಳಿಕ ಮಾತನಾಡಿದ ಸಚಿವರು, ಬಸವಣ್ಣನ ಹುಟ್ಟೂರಾದ ಬಸವನ ಬಾಗೇವಾಡಿಯಲ್ಲಿ ಸೆ.1ರಂದು ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಈ ಅಭಿಯಾನದ ಅಂಗವಾಗಿ ರಾಜ್ಯದ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಕಾರ್ಯಕ್ರಮಗಳು ನಡೆಯಲಿವೆ. ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಗದಗಿನ ತೋಂಟದಾರ್ಯ ಸಂಸ್ಥಾನ ಮಠದ ಸಿದ್ಧರಾಮ ಸ್ವಾಮೀಜಿ, ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಭಾಲ್ಕಿಯ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು, ನಾಗನೂರು ರುದ್ರಾಕ್ಷಿ ಮಠದ ಅಲ್ಲಮ ಪ್ರಭು ಸ್ವಾಮೀಜಿ, ಬಸವ ಧರ್ಮ ಪೀಠದ ಬಸವ ಯೋಗಿ ಸ್ಬಾಮೀಜಿ ಉಪಸ್ಥಿತರಿದ್ದರು.
ನಿವೃತ್ತ ಐಎಎಸ್ ಅಧಿಕಾರಿಗಳಾದ ಎಸ್.ಎಂ.ಜಾಮದಾರ್, ಡಾ.ಸಿ.ಸೋಮಶೇಖರ್ ಸಭೆಯಲ್ಲಿ ಇದ್ದರು.
ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಕಾರ್ಯಕ್ರಮದಲ್ಲಿ ನಾಡಿನ ಎಲ್ಲೆಡೆಯಿಂದ ಬಸವಣ್ಣನ ಸಾವಿರಾರು ಅನುಯಾಯಿಗಳು ಪಾಲ್ಗೊಳ್ಳಲಿದ್ದಾರೆ.
–ಎಂ.ಬಿ.ಪಾಟೀಲ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.