ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಭಾನುವಾರ ರಾತ್ರಿ ದಿಢೀರ್ ದೆಹಲಿಗೆ ತೆರಳಿದ್ದು, ಸಂಪುಟ ವಿಸ್ತರಣೆ ಪ್ರಕ್ರಿಯೆ ಒಂದೆರಡು ದಿನಗ ಳಲ್ಲಿ ನಡೆಯುವ ಸಾಧ್ಯತೆ ಇದೆ. ಯಾರಿಗೆಲ್ಲಾ ಸಂಪುಟದಲ್ಲಿ ಅವಕಾಶ ದೊರಕಬಹುದು ಎಂಬ ಕುತೂಹಲ ಗರಿಗೆದರಿದೆ.
ಪ್ರಮಾಣವಚನ ಸ್ವೀಕರಿಸಿದ ಬಳಿಕ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಿದ್ದ ಬೊಮ್ಮಾಯಿ, ಶನಿವಾರ ಸಂಜೆಯಷ್ಟೇ ಬೆಂಗಳೂರಿಗೆ ಮರಳಿದ್ದರು. 24 ಗಂಟೆಗಳಲ್ಲೇ ಪುನಃ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಜತೆ ದೆಹಲಿಗೆ ತೆರಳಿದ ಅವರು, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಜೊತೆ ತಡರಾತ್ರಿವರೆಗೂ ಚರ್ಚೆ ನಡೆಸಿದರು. ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಸೋಮವಾರ ಬೆಳಿಗ್ಗೆ ಭೇಟಿ ಮಾಡಿ, ಸಚಿವರ ಪಟ್ಟಿಗೆ ಒಪ್ಪಿಗೆ ಪಡೆದು ಬೊಮ್ಮಾಯಿ ಅವರು ಸಂಜೆ ವಾಪಸ್ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ. ಹಿರಿಯ ಶಾಸಕರಾದ ಗೋವಿಂದ ಕಾರಜೋಳ, ಆರ್. ಅಶೋಕ ಮತ್ತು ಬಿ. ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ ಎಂಬ ಮಾಹಿತಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದ ದಿನವೇ ಪಕ್ಷದ ಮೂಲಗಳಿಂದ ಹೊರಬಿದ್ದಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.