ಬೆಳಗಾವಿ: 'ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಶುಕ್ರವಾರ ದೆಹಲಿಗೆ ಹೊರಟಿದ್ದು, ಮುಖ್ಯ ನ್ಯಾಯಮೂರ್ತಿಗಳ ಸಮ್ಮೇಳನದಲ್ಲಿ ಭಾಗವಹಿಸಿ ವಾಪಸ್ ಬರುತ್ತೇನೆ. ಹೈಕಮಾಂಡ್ ಕರೆದ ದಿನ ಮತ್ತೆ
ಹೋಗಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸುತ್ತೇನೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಜ್ಯದಲ್ಲಿ ಸಾರಿಗೆ ನೌಕರರು ಮತ್ತೆ ಕೈಗೊಳ್ಳುತ್ತಿರುವ ಮುಷ್ಕರದ ಬಗ್ಗೆ ಸಾರಿಗೆ ಸಚಿವರು ನೋಡಿಕೊಳ್ಳುತ್ತಾರೆ' ಎಂದರು.
'ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮ ಹೆಸರು ನಾಮಕರಣ ಮಾಡುವ ಸಂಬಂಧ ಇಲ್ಲಿನ ಎಲ್ಲ ನಾಯಕರ ಜೊತೆಗೆ ಚರ್ಚಿಸಿ ತೀರ್ಮಾನಿಸಲಾಗುವುದು' ಎಂದರು.
'ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಇನ್ನೂ ಯಾವುದೇ ನಿರ್ಣಯ ಕೈಗೊಂಡಿಲ್ಲ. ವಿಭಜನೆ ಬಗ್ಗೆ ಅನೇಕ ವರ್ಷಗಳಿಂದ ಚರ್ಚೆ ನಡೆದಿದೆ. ಎರಡು ಅಥವಾ ಮೂರು ಜಿಲ್ಲೆಗಳ ವಿಭಜನೆ ಬಗ್ಗೆ ಪ್ರಸ್ತಾಪವಿದೆ. ಗಡಿಭಾಗದ ಜಿಲ್ಲೆಯಾಗಿರುವುದರಿಂದ
ವಿಭಜನೆ ಬೇಡವೆಂದು ದಿವಂಗತ ಜೆ.ಎಚ್.ಪಟೇಲ್ ಅವರು ಮುಖ್ಯಮಂತ್ರಿ ಆಗಿದ್ದಾಗ ಹೇಳಿದ್ದರು. ಈಗ ಮತ್ತೆ ಜನರು ಒತ್ತಾಸೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಹಾಗೂ ಜಿಲ್ಲೆಯ ಹಿತದೃಷ್ಟಿಯಿಂದ ಈ ಬಗ್ಗೆ ನಾವು ನಿರ್ಣಯ ಕೈಗೊಳ್ಳುತ್ತೇವೆ' ಎಂದು ಪ್ರತಿಕ್ರಿಯಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.