ADVERTISEMENT

ಅಯೋಧ್ಯೆಯಲ್ಲಿ ಭೂಮಿ ಪೂಜೆ | ರಾಜ್ಯದಲ್ಲಿ ಕಟ್ಟೆಚ್ಚರ; ಡ್ರೋನ್‌ ಮೂಲಕ ಕಣ್ಗಾವಲು

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 11:17 IST
Last Updated 4 ಆಗಸ್ಟ್ 2020, 11:17 IST
ಗೃಹ ಸಚಿವ ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ   

ಬೆಂಗಳೂರು:ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಬುಧವಾರ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಸೆಕ್ಷನ್‌ 144 ವಿಧಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಅಲ್ಲದೆ ಸೂಕ್ಷ್ಮ ಪ್ರದೇಶಗಳಲ್ಲಿ ಡ್ರೋನ್‌ ಮೂಲಕ ನಿಗಾವಹಿಸುವುದರ ಜತೆಗೆ, ದೇವಸ್ಥಾನ ಮತ್ತು ಪ್ರಾರ್ಥನಾ ಮಂದಿಗಳಿಗೆ ಬಂದೋಬಸ್ತ್‌ ಒದಗಿಸಲು ತೀರ್ಮಾನಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ವಿಡಿಯೊ ಸಂವಾದದ ಬಳಿಕ ಅವರು ತಿಳಿಸಿದ್ದಾರೆ.

ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ಕಲಬುರ್ಗಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳು ನಿಗಾವಹಿಸಬೇಕು. ಅಲ್ಲದೆ, ಗಡಿ ಜಿಲ್ಲೆಗಳಾದ ಚಾಮರಾಜನಗರ, ಮಡಿಕೇರಿ, ಬೆಳಗಾವಿ, ಮಂಗಳೂರು, ಕೋಲಾರ, ಕಲಬುರ್ಗಿ ಜಿಲ್ಲೆಗಳ ಗಡಿ ಪೋಸ್ಟ್‌ಗಳಲ್ಲೂ ಸೂಕ್ತ ಬಂದೋಬಸ್ತ್‌ ಮಾಡಿ, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾವಹಿಸಲಾಗುವುದು ಎಂದಿದ್ದಾರೆ.

ADVERTISEMENT

ರಾಮಜನ್ಮಭೂಮಿ ಕುರಿತಂತೆ ಸುಪ್ರೀಂಕೋರ್ಟ್‌ ಆದೇಶವನ್ನು ಪಾಲಿಸುವುದು ಎಲ್ಲ ನಾಗರೀಕರ ಕರ್ತವ್ಯ ಮತ್ತು ಜವಾಬ್ದಾರಿ. ಶಿಲಾನ್ಯಾಸ ಮತ್ತು ಭೂಮಿ ಪೂಜೆ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದು. ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಕೋವಿಡ್‌ ಇರುವುದರಿಂದ ಎಲ್ಲರೂ ತಮ್ಮ ಮನೆಗಳು, ದೇವಸ್ಥಾನ ಮತ್ತು ಮಂದಿರಗಳಲ್ಲಿ ಮಾತ್ರ ಅಚರಣೆ ಮಾಡಬಹುದು.

ಫೇಸ್‌ಬುಕ್‌ ಮತ್ತು ವಾಟ್ಸ್‌ಆಪ್‌ ಮೇಲೆ ಕಣ್ಣಿಡಲಾಗುವುದು. ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಮಾಹಿತಿ ಪ್ರಕಟಿಸಿದರೆ, ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಕಾನೂನು ಉಲ್ಲಂಘಿಸುವರ ವಿರುದ್ಧ ಗೂಂಡಾಕಾಯ್ದೆ ಹಾಕಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.