ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ. ಅದನ್ನು ಮಾಡಿಯೇ ತೀರುತ್ತೇವೆ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮೇಕೆದಾಡು ಯೋಜನೆ ಬಗ್ಗೆ ಮಾತನಾಡಿರುವ ಭಾಷೆ ಮತ್ತು ವೈಖರಿ ಸರಿಯಾಗಿಲ್ಲ ಎಂದು ಹೇಳಿದರು.
ಕೃಷ್ಣರಾಜಸಾಗರ ಅಣೆಕಟ್ಟು ಸೇರಿದಂತೆ ಎಲ್ಲ ನೀರಾವರಿ ಯೋಜನೆಗಳಿಗೂ ತಮಿಳುನಾಡು ಅಡ್ಡಿ ಮಾಡುತ್ತಲೇ ಬಂದಿತ್ತು. ಎಲ್ಲದಲ್ಲೂ ಆಕ್ಷೇಪ ವ್ಯಕ್ತಪಡಿಸಿತ್ತು. ನಾವು ಈಗ ಮಾಡಲು ಹೊರಟಿರುವುದು ಕುಡಿಯುವ ನೀರು ಮತ್ತು ಜಲವಿದ್ಯುತ್ ಉತ್ಪಾದನೆ ಯೋಜನೆಯಾಗಿದೆ. ಜಲ ಸಂಕಷ್ಟದ ಸಂದರ್ಭದಲ್ಲಿ ನೀರು ನಿರ್ವಹಣೆಗೂ ಈ ಯೋಜನೆ ಸಹಾಯಕವಾಗಲಿದೆ ಎಂದರು.
ಈ ಯೋಜನೆಗೆ ಸಂಬಂಧಿಸಿದ ಪ್ರಕರಣವೊಂದು ಸುಪ್ರೀಂಕೋರ್ಟ್ನಲ್ಲಿದೆ. ಕಾನೂನು ಹೋರಾಟದಲ್ಲಿ ರಾಜ್ಯಕ್ಕೇ ಜಯವಾಗುತ್ತದೆ ಎಂಬ ವಿಶ್ವಾಸವಿದೆ. ಇದಕ್ಕೆ ಕೇಂದ್ರದ ವಿವಿಧ ಇಲಾಖೆಗಳಿಂದ ಸಿಗಬೇಕಾದ ಎಲ್ಲ ಅನುಮತಿಗಳೂ ಸಿಗಲಿದೆ ಎಂದು ಬೊಮ್ಮಾಯಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.