ಬೆಂಗಳೂರು: ‘ಮಾಜಿ ಸಚಿವ ಎಚ್.ವೈ.ಮೇಟಿ ಸಿ.ಡಿ ಪ್ರಕರಣ ಮುಚ್ಚಿಹಾಕಿರುವ ಕಾಂಗ್ರೆಸ್ನವರಿಂದ ನೈತಿಕಪಾಠ ಅಗತ್ಯವಿಲ್ಲ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರಲು ಕಾಂಗ್ರೆಸ್ ಮುಖಂಡರು ದುರುದ್ದೇಶದಿಂದ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು.
‘ಇಷ್ಟು ದಿನ ಬಿಟ್ಟು ಕಾಂಗ್ರೆಸ್ ಮುಖಂಡರು ಈಗಲೇ ಯಾಕೆ ಈ ವಿಷಯ ಕೈಗೆತ್ತಿಕೊಂಡರು? ಹೈಕೋರ್ಟ್ನಲ್ಲಿ ರಿಟ್ ಅರ್ಜಿ ದಾಖಲಾಗಿರುವ ಕಾರಣವೇ? ಪ್ರಕರಣ ಕುರಿತು ತನಿಖಾಧಿಕಾರಿಗಳು ಹೈಕೋರ್ಟ್ಗೆ ವರದಿ ಸಲ್ಲಿಸುತ್ತಾರೆ. ಹೀಗಾಗಿ ಅವರ ಮೇಲೆ ಪ್ರಭಾವ ಬೀರುವ ದುರುದ್ದೇಶದಿಂದ ಈಗ ಹೇಳಿಕೆ ನೀಡುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.
‘ಎಚ್.ವೈ.ಮೇಟಿ ಪ್ರಕರಣದಲ್ಲಿ ಸಂತ್ರಸ್ತೆ ದೂರು ನೀಡಿದ್ದೂ, ಮೇಟಿ ಹೆಸರನ್ನೇ ದಾಖಲಿಸಿಕೊಳ್ಳಲಿಲ್ಲ. ಮಾಜಿ ಸಚಿವರ ಹೆಸರು ಸೇರಿಸದೇ ಪ್ರಕರಣದ ತನಿಖೆ ನಡೆಸಿ ಮುಚ್ಚಿ ಹಾಕಿದರು’ ಎಂದುಕಿಡಿಕಾರಿದರು.
ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆದಿದೆ. ಸರ್ಕಾರ ಹಸ್ತಕ್ಷೇಪ ಮಾಡಿಲ್ಲ ಎಂದು ಹೇಳಿದರು. ರಮೇಶ ಜಾರಕಿಹೊಳಿ ಅವರು ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.