ಹಾವೇರಿ: ‘ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಶುಕ್ರವಾರ ಜೀವಬೆದರಿಕೆ ಕರೆ ಬಂದದ್ದು ನಿಜ. ಆ ಎರಡೂ ಕರೆಗಳನ್ನು ಪರಿಶೀಲಿಸಿದಾಗ, ತಮಿಳುನಾಡಿನಿಂದ ಬಂದದ್ದು ಎಂಬುದು ಗೊತ್ತಾಗಿದೆ’ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪ್ರಗತಿ ಪರಿಶೀಲನಾ ಸಭೆಗೆ ಶನಿವಾರ ಬಂದಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ‘ಮುಂದಿನ ತನಿಖೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಕೈಗೊಳ್ಳುತ್ತಾರೆ. ಈಶ್ವರಪ್ಪ ಅವರಿಗೆ ಸೂಕ್ತ ಭದ್ರತೆ ಕೊಡಲು ಸೂಚನೆ ನೀಡಿದ್ದೇನೆ’ ಎಂದು ಹೇಳಿದರು.
ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ತಮಿಳು ಭಾಷೆಯಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದ. ‘ಈಶ್ವರಪ್ಪ ಕೇವಲ ಹಿಂದುತ್ವ ಕುರಿತು ಮಾತನಾಡುತ್ತಾರೆ. ಪರಿಣಾಮ 48 ಗಂಟೆಯೊಳಗೆ ಅವರ ಜೀವಕ್ಕೆ ಅಪಾಯವಾಗಲಿದೆ’ ಎಂದು ಎಚ್ಚರಿಕೆ ನೀಡಿದ್ದ ಎನ್ನಲಾಗಿದೆ.
ರಾಜ್ಯಕ್ಕೆ ನೆರೆ ಪರಿಹಾರ ನೀಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿಲ್ಲವಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ, ‘ಮುಖ್ಯಮಂತ್ರಿ ಜತೆ ಮೋದಿ ಮಾತನಾಡಿದ್ದಾರೆ. ಮೋದಿ ಅವರಿಗೆ ಕರ್ನಾಟಕದ ಬಗ್ಗೆ ಅಪಾರ ಪ್ರೀತಿ, ವಿಶ್ವಾಸವಿದೆ. ಬರ ಬಂದಾಗ ರಾಜ್ಯಕ್ಕೆ ಹೆಚ್ಚು ಪರಿಹಾರ ನೀಡಿದ್ದಾರೆ. ಈಗಲೂ ಕೊಡುತ್ತಾರೆ. ವಿರೋಧ ಪಕ್ಷದವರು ತಮ್ಮ ಸರ್ಕಾರವಿದ್ದಾಗ ಎಷ್ಟು ಬರ ಪರಿಹಾರ ರಾಜ್ಯಕ್ಕೆ ಬಂದಿತ್ತು. ಕಳೆದ 5 ವರ್ಷಗಳಲ್ಲಿ ಎಷ್ಟು ಬಂದಿದೆ ಎಂಬುದುನ್ನು ತಿಳಿದುಕೊಂಡು ಮಾತನಾಡಲಿ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.