ಬೆಂಗಳೂರು: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ರಾಜ್ಯದಲ್ಲಿ ಜಾರಿ ಮಾಡಲಾಗುವುದು. ಯಾರದ್ದೇ ಒತ್ತಡಕ್ಕೆ ಮಣಿದು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಕೇಂದ್ರ ಸರ್ಕಾರವೇ ಈ ಪ್ರಕ್ರಿಯೆ ನಡೆಸುವುದರಿಂದ ಅದಕ್ಕೆ ಪೂರಕ ಮಾಹಿತಿಗಳನ್ನು ನೀಡುತ್ತೇವೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರ ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ. ಈ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ ಬಳಿಕ ಕೇಂದ್ರ ಗೃಹ ಇಲಾಖೆ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ವಿವರಿಸಿದರು.
ಅಕ್ರಮವಾಗಿ ನೆಲೆಸಿರುವವರನ್ನು ಬಂಧಿಸಿಡಲು ಹೊಸ ಬಂದೀಖಾನೆ ಸ್ಥಾಪಿಸುತ್ತಿಲ್ಲ. ಆದರೆ, ವೀಸಾ ಅವಧಿ ಮುಗಿದ ಬಳಿಕವೂ ಇಲ್ಲಿ ಉಳಿಯುವ ವಿದೇಶಿಗರನ್ನು ಪತ್ತೆ ಮಾಡಿ ಅವರನ್ನು ಇರಿಸಲು ಸ್ಥಾಪಿಸಲಾಗುತ್ತಿದೆ. ಅಧಿಕೃತ ದಾಖಲೆ ಪತ್ರಗಳು ಇಲ್ಲದೇ ವಾಸವಾಗಿರುವವರನ್ನು ಮಾತ್ರ ಇಲ್ಲಿ ಇರಿಸಲಾಗುವುದು. ಬಳಿಕ ಅವರ ದೇಶದ ರಾಯಭಾರಿ ಕಚೇರಿ ಸಂಪರ್ಕಿಸಿ, ಅವರವರ ದೇಶಗಳಿಗೆ ಕಳುಹಿಸಲಾಗುವುದು ಎಂದರು.
‘ಹುಬ್ಬಳ್ಳಿಯಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಪೊಲೀಸರ ಜತೆಗೆ ನಮ್ಮ ಪೊಲೀಸರು ಸಂಪರ್ಕದಲ್ಲಿದ್ದಾರೆ. ಈವರೆಗೂ ಯಾರನ್ನೂ ಬಂಧಿಸಿಲ್ಲ’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.