ಕೊಪ್ಪಳ: ‘ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳಾಗಬೇಕು. ಸಚಿವರು ಮತ್ತು ಶಾಸಕರ ನಡುವೆ ಹೆಚ್ಚಿನ ಸ್ಪಂದನೆ ಇರಬೇಕು ಎನ್ನುವ ಕಾರಣಕ್ಕಾಗಿ ಶಾಸಕ ಬಿ.ಆರ್. ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರಕ್ಕೆ ಸಹಿ ಮಾಡಿದ್ದೇನೆ’ ಎಂದು ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
ಕುಕನೂರು ತಾಲ್ಲೂಕಿನ ಭಾನಾಪುರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಪತ್ರ ಬರೆದಿರುವ ವಿಚಾರದಲ್ಲಿ ಮುಚ್ಚುಮರೆ ಏನೂ ಇಲ್ಲ. ಪಾಟೀಲರು ಶಾಸಕಾಂಗ ಪಕ್ಷದ ಸಭೆ ಕರೆಯಲು ಪತ್ರ ಬರೆದಿದ್ದಾರೆ. ನಾನೂ ಸೇರಿದಂತೆ ಅನೇಕ ಶಾಸಕರು ಸಹಿ ಮಾಡಿದ್ದಾರೆ’ ಎಂದರು.
‘ವರ್ಗಾವಣೆ ವಿಚಾರವಾಗಿ ಕೆಲವೊಂದು ಶಾಸಕರಿಗೆ ಅಸಮಾಧಾನ ಇರಬಹುದು. ಕೆಲವರು ಇದನ್ನು ಮುಕ್ತವಾಗಿ ಹೇಳುವುದಲ್ಲ. ನನಗಂತೂ ಏನೂ ಅಸಮಾಧಾನವಿಲ್ಲ. ಸಿದ್ದರಾಮಯ್ಯ ಅವರು ಭಾರತದ ಉತ್ತಮ ಮುಖ್ಯಮಂತ್ರಿ. ಇದು ಸಹಜವಾಗಿಯೇ ವಿರೋಧ ಪಕ್ಷಕ್ಕೆ ಆಹಾರವಾಗುತ್ತದೆ. ಇದರಲ್ಲಿ ಯಾವುದೇ ಆತಂಕಪಡುವ ಅಗತ್ಯವಿಲ್ಲ. ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗೆ ಏನೇ ತೊಂದರೆಯಿಲ್ಲ’ ಎಂದು ಹೇಳಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.