ಬೆಂಗಳೂರು: ಕೇಂದ್ರ ಸರ್ಕಾರವು ಸ್ಮಾರ್ಟ್ ಸಿಟಿ ಅಭಿಯಾನದಡಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಮುಂದಾಗಿದೆ.
ಕೊರೊನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲಿಯೇ ಸರ್ಕಾರಿ ಆಸ್ಪತ್ರೆಗಳು ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿವೆ. ಸ್ಮಾರ್ಟ್ ಸಿಟಿ ಅಭಿಯಾನದ ರಾಜ್ಯ ನಿರ್ದೇಶಕಿ ಚಾರುಲತಾ ಸೋಮಲ್ ಅವರುಆರೋಗ್ಯ ಇಲಾಖೆಯ ಆಯುಕ್ತರೊಂದಿಗೆ ಮಾತುಕತೆ ನಡೆಸಿ,ಸರ್ಕಾರಿ ಆಸ್ಪತ್ರೆಗಳಿಗೆ ಮೂಲಸೌಕರ್ಯ ಒದಗಿಸುವ ಸಂಬಂಧ ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ. ಈಗಾಗಲೇಕಾರ್ಯಯೋಜನೆಯನ್ನೂ ರೂಪಿಸಲಾಗಿದೆ.
‘ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಳಗಾವಿಯ ವಂಟಮುರಿಯಲ್ಲಿ 30 ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲಾಗಿದೆ. ಟ್ರಾಮಾ ಕೇಂದ್ರವನ್ನೂ ಸೇವೆಗೆ ಅಣಿಗೊಳಿಸಲಾಗಿದೆ.ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ 37 ಹಾಸಿಗೆಗಳ ತೀವ್ರ ನಿಗಾ ಘಟಕವನ್ನು ನಿರ್ಮಿಸಲಾಗುತ್ತಿದೆ. ಅದೇ ರೀತಿ, ಅಲ್ಲಿನ ಆಸ್ಪತ್ರೆಯನ್ನೂ ಮೇಲ್ದರ್ಜೆಗೇರಿಸುವ ಎರಡು ಹಂತಗಳ ಯೋಜನೆಗಳನ್ನು ರೂಪಿಸಲಾಗಿದೆ.ತುಮಕೂರಿನಲ್ಲಿ ಡಿಜಿಟಲ್ ನರ್ವ್ ಸೆಂಟರ್ ಮತ್ತು ಹುಬ್ಬಳ್ಳಿ–ಧಾರವಾಡದಲ್ಲಿ ಸ್ಮಾರ್ಟ್ ಹೆಲ್ತ್ಕೇರ್ ಸೆಂಟರ್ ಆರಂಭಿಸಲಾಗಿದೆ. ಇದೇ ರೀತಿ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು’ ಎಂದು ಅಭಿಯಾನದ ಅಧಿಕಾರಿಗಳು ತಿಳಿಸಿದರು.
ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ‘ಕೋವಿಡ್ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರವು ಸ್ಮಾರ್ಟ್ ಸಿಟಿ ಅಭಿಯಾನದಡಿ ಹಲವು ಯೋಜನೆಗಳನ್ನು ರೂಪಿಸಿ, ಜಾರಿ ಮಾಡುತ್ತಿದೆ. ಈ ಬಗ್ಗೆ ಅಗತ್ಯ ಮಾಹಿತಿಗಳನ್ನೂ ಪಡೆದುಕೊಂಡಿದೆ. ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಅತ್ಯಾಧುನಿಕ ಉಪಕರಣಗಳ ಖರೀದಿ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಇದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನಷ್ಟು ಗುಣಮಟ್ಟದ ಸೇವೆ ದೊರೆಯಲಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.