ಬೆಂಗಳೂರು: ‘ನಗರ ಪಾಲಿಕೆಗಳ ಚುನಾವಣೆಗೆ ಎಲ್ಲ ನಾಯಕರು ತಯಾರಾಗಿ, ಮತಗಟ್ಟೆಗಳಲ್ಲಿ ತೀವ್ರ ನಿಗಾವಹಿಸಿ ‘ಮತ ಕಳ್ಳತನ’ವಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಸೂಚಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಗರದ ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರೊಂದಿಗೆ ಶುಕ್ರವಾರ ಸಂಜೆ ನಡೆಸಿದ ಸಭೆಯಲ್ಲಿ ‘ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲರೂ ಸರ್ವರೀತಿಯಲ್ಲೂ ಸಜ್ಜಾಗಬೇಕು. ಪಕ್ಷ ಸಂಘಟಿಸಿ, ಎಲ್ಲ ಪಾಲಿಕೆಗಳಲ್ಲೂ ಅಧಿಕಾರ ಪಡೆದುಕೊಳ್ಳಬೇಕು’ ಎಂದು ಪಕ್ಷದ ಮುಖಂಡರಿಗೆ ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ. ಸಿ. ಚಂದ್ರಶೇಖರ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಸಚಿವರಾದ ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಬೈರತಿ ಸುರೇಶ್, ಕೆ.ಎಚ್ ಮುನಿಯಪ್ಪ, ಜಮೀರ್ ಅಹ್ಮದ್, ಮುಖ್ಯಮಂತ್ರಿಯವರ ರಾಜಕೀಯ ಸಲಹೆಗಾರ ನಸೀರ್ ಅಹ್ಮದ್, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ ರೇವಣ್ಣ, ಶಾಸಕರಾದ ಕೃಷ್ಣಪ್ಪ, ಶ್ರೀನಿವಾಸ್, ರಿಜ್ವಾನ್ ಅರ್ಷದ್, ಪುಟ್ಟಣ್ಣ, ಎಸ್. ರವಿ, ರಾಮೋಜಿಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾರೆಡ್ಡಿ ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.