ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಮತ್ತು ಆಯುಕ್ತ ಡಾ.ಎಚ್.ಆರ್. ಮಹಾದೇವ ನಡುವೆ ಗುದ್ದಾಟಕ್ಕೆ ಕಾರಣವಾಗಿರುವ ಹಗರಣದ ಕುರಿತು ತನಿಖೆಗೆ ಆದೇಶಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.
ಈ ಕುರಿತು ಶುಕ್ರವಾರ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ‘ಇತ್ತೀಚಿನ ದಿನಗಳಲ್ಲಿ ಬಿಡಿಎ ಅಂಗಳದಿಂದ ದಿನಕ್ಕೊಂದು ಹಗರಣಗಳು ಹೊರಬರುತ್ತಿವೆ. ಸಂಸ್ಥೆಯನ್ನು ಮುನ್ನಡೆಸಬೇಕಾದ ಅಧ್ಯಕ್ಷ ಮತ್ತು ಆಯುಕ್ತರೇ ಗುದ್ದಾಟಕ್ಕೆ ಇಳಿದಿದ್ದಾರೆ. ಸ್ವಹಿತಾಸಕ್ತಿಗಾಗಿ ಇಬ್ಬರು ನಡೆಸುತ್ತಿರುವ ಗುದ್ದಾಟ ಬೀದಿ ಜಗಳದ ಸ್ವರೂಪ ಪಡೆದುಕೊಂಡಿದೆ. ಇದರಿಂದ ಜನರು ಬಿಡಿಎ ಮೇಲೆ ವಿಶ್ವಾಸ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದ್ದಾರೆ.
ಭವಾನಿ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಜಮೀನು ಹಂಚಿಕೆ ಮಾಡುವ ವಿಚಾರದಲ್ಲಿ ಅಧ್ಯಕ್ಷರು ಮತ್ತು ಆಯುಕ್ತರು ಆರೋಪ– ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ. ‘ಬಿಡಿಎಯಲ್ಲಿ ಉಸಿರು ಕಟ್ಟಿಸುವ ವಾತಾವರಣ ಇದೆ’ ಎಂದು ಹಿಂದಿನ ಅಧ್ಯಕ್ಷರೂ ಆಗಿರುವ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಈ ಎಲ್ಲವೂ ಸಂಸ್ಥೆಯ ಕುರಿತು ಅಪನಂಬಿಕೆ ಸೃಷ್ಟಿಸಿವೆ ಎಂದು ದೂರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.