ADVERTISEMENT

ಬೇಡ ಜಂಗಮ: ಎಸ್‌ಸಿ ಪ್ರಮಾಣ ಪತ್ರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಜನವರಿ 2021, 18:13 IST
Last Updated 27 ಜನವರಿ 2021, 18:13 IST
ಬೇಡ ಜಂಗಮ ಸಮುದಾಯದವರಿಗೆ ಜಾತಿ ಸಿಂಧುತ್ವ ಪ್ರಮಾಣ ಪತ್ರವನ್ನು ನೀಡುವಂತೆ ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು.
ಬೇಡ ಜಂಗಮ ಸಮುದಾಯದವರಿಗೆ ಜಾತಿ ಸಿಂಧುತ್ವ ಪ್ರಮಾಣ ಪತ್ರವನ್ನು ನೀಡುವಂತೆ ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು.   

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ) ಪ್ರಮಾಣ ಪತ್ರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟವು ಸರ್ಕಾರವನ್ನು ಒತ್ತಾಯಿಸಿದೆ.

ಬುಧವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷ ಬಿ.ಡಿ. ಹಿರೇಮಠ ಮಾತನಾಡಿ, ‘ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.7ರಂದು ಬೀದರಿನ ಬಸವಕಲ್ಯಾಣ ಹಾಗೂ ಫೆ.19ರಂದು ದಾವಣಗೆರೆಯ ಚನ್ನಗಿರಿಯಲ್ಲಿ ಹೋರಾಟ ಪೂರ್ವ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಶತಮಾನಗಳಿಂದ ಆರ್ಥಿಕ ಮತ್ತು ಸಾಮಾಜಿಕವಾಗಿ
ಬೇಡ ಜಂಗಮರು ಕಡೆಗಣಿಸಲ್ಪಟ್ಟಿದ್ದಾರೆ. ಕೇಂದ್ರ ಸರ್ಕಾರವು
ಭಿಕ್ಷಾ ವೃತ್ತಿ ಕಾಯಕದ ಬೇಡ ಜಂಗಮರನ್ನು ಪರಿಶಿಷ್ಟ ಜಾತಿ ಕಾಯ್ದೆಯಡಿ ಸೇರಿಸಿದೆ. ಆದರೆ, ರಾಜಕೀಯ ಹಿತಾಸಕ್ತಿಯಿಂದ ಬೇಡ ಜಂಗಮ ಜನಾಂಗಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಲು ವಿಳಂಬ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.

‘ಫೆಬ್ರವರಿಯಲ್ಲಿ ನಡೆಯುವ ಸಮಾವೇಶವು ಮುಂದಿನ ಹೋರಾಟದ ದಿಕ್ಸೂಚಿಯಾಗಲಿದೆ. ರಾಜ್ಯ ಸರ್ಕಾರವು ಕೂಡಲೇ ಬೇಡ ಜಂಗಮರಿಗೆ ಪ್ರಮಾಣಪತ್ರವನ್ನು ನೀಡಬೇಕು. ಮಂತ್ರಿಮಂಡಲದಲ್ಲಿ ಸಮಾಜದ ಎಂ.ಪಿ. ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ಹಾಗೂ ಸಮಾಜದ ಬಸವರಾಜ ಸ್ವಾಮಿ ಅವರಿಗೆ ಬಸವಕಲ್ಯಾಣ ಉಪ ಚುನಾವಣೆಗೆ ಟಿಕೆಟ್ ನೀಡಬೇಕು. ಜನಾಂಗದವರ ಅಭಿವೃದ್ಧಿಗೆ ನಿಗಮ ಸ್ಥಾಪಿಸುವ ಜತೆಗ ಈ ಸಾಲಿನ ಬಜೆಟ್‍ನಲ್ಲಿ ಹೆಚ್ಚು ಹಣವನ್ನು ಮೀಸಲಿಡಬೇಕು. ಸಮಾಜದಲ್ಲಿ ರೈತ ಮತ್ತು ಬೇಡ ಜಂಗಮರು ಮಾತ್ರ ಕಾಯಕ ಯೋಗಿಗಳಾಗಿದ್ದಾರೆ. ಅವರಿಗೆ ಸೂಕ್ತ ಸ್ಥಾನಮಾನ ದೊರೆಯಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.