ADVERTISEMENT

ಫ್ರೀಡಂ ಪಾರ್ಕ್‌ನಲ್ಲಿ ಬೇಡಜಂಗಮರ 'ಸತ್ಯ ಪ್ರತಿಪಾದನಾ ಸತ್ಯಾಗ್ರಹ'

​ಪ್ರಜಾವಾಣಿ ವಾರ್ತೆ
Published 30 ಜೂನ್ 2022, 10:36 IST
Last Updated 30 ಜೂನ್ 2022, 10:36 IST
   

ಬೆಂಗಳೂರು:ಬೇಡಜಂಗಮ ಸಮುದಾಯದ ಸಾಂವಿಧಾನಿಕ ಹಾಗೂ ಕಾನೂನುಬದ್ಧ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಖಿಲ ಕರ್ನಾಟಕ ಬೇಡಜಂಗಮ ಸಂಘಟನೆಗಳ ಒಕ್ಕೂಟದ ವತಿಯಿಂದ ಗುರುವಾರ ’ಸತ್ಯ ಪ್ರತಿಪಾದನಾ ಸತ್ಯಾಗ್ರಹ’ ನಡೆಯಿತು.

‘ನಾವು ಸತ್ಯವನ್ನು ಪ್ರತಿಪಾದಿಸುತ್ತಿದ್ದೇವೆ. ನಮ್ಮ ಕುಲವನ್ನೇ ನಾಶಪಡಿಸಲು ಕೆಲವು ಸದನಸಮಿತಿಯ ಕೆಲ ಶಾಸಕರು ಪ್ರಯತ್ನಿಸಿದ್ದಾರೆ. ನಮ್ಮ ಕುಲದ ಮರಣ ಶಾಸನ ಬರೆಯುವ ಯತ್ನ ಮಾಡಲಾಗಿದೆ. ಹೀಗಾಗಿ, ಸತ್ಯಪ್ರತಿಪಾದನೆಗಾಗಿ ಈ ಹೋರಾಟ ಮಾಡಲಾಗುತ್ತಿದೆ’ ಎಂದುಒಕ್ಕೂಟದ ಅಧ್ಯಕ್ಷ ಬಿ.ಡಿ.ಹಿರೇಮಠ ತಿಳಿಸಿದರು.

‘ಕೇಂದ್ರ ಸರ್ಕಾರದ ಪರಿಶಿಷ್ಟ ಜಾತಿ ಕಾಯ್ದೆಯಲ್ಲಿನ ಬೇಡಜಂಗಮ ಕುರಿತು, ವಿಧಾನಸಭೆಯಲ್ಲಿ ಅನಗತ್ಯವಾಗಿ ಅಸಂಬದ್ಧವಾಗಿ ಹಾಗೂ ಅಸಂವಿಧಾನಕವಾಗಿ ಚರ್ಚೆ ನಡೆಯುತ್ತಿರುವ ಬಗ್ಗೆ ನಮ್ಮ ಒಕ್ಕೂಟವು ಆತಂಕ ವ್ಯಕ್ತಪಡಿಸಬಯಸುತ್ತದೆ’ ಎಂದು ತಿಳಿಸಿದರು.

ADVERTISEMENT

‘ಬೇಡಜಂಗಮ ಸಮಾವೇಶಕ್ಕೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಮಂದಿ ಆಗಮಿಸುತ್ತಿದ್ದಾರೆ. ಆದರೆ,ತುಮಕೂರಿನ ಶಿರಾ ಟೋಲ್‌ ಬಳಿ ತಡೆಹಿಡಿಯಲಾಗಿದೆ. ಈ ಮೂಲಕ ಸರ್ಕಾರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಆದರೆ, ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ’ ಅವರು ದೂರಿದರು.

‘ಸಮುದಾಯದವರು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ್ದಾರೆ. ಹೀಗಾಗಿ, ಸರ್ಕಾರದ ಮುಂದೆ ಬೇಡಿಕೆಯನ್ನು ಮಂಡಿಸುತ್ತಿದ್ದೇವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.